ಆ.30ರವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳಿಗೆ ಅವಕಾಶವಿಲ್ಲ

ಮಂಗಳೂರು, ಆಗಸ್ಟ್ 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಪೂಜಾ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್‍ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ.

ಕೇವಲ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಇರುವುದಿಲ್ಲ. ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೂ ಅವಕಾಶ ನಿರ್ಬಂಧಿಸಲಾಗಿದೆ ಎಂದು ದೇವಳದ ಪ್ರಕಟಣೆಯಲ್ಲಿ ಹೇಳಿದೆ.

All Pooja Seva At Kukke Subramanya Temple Suspended Till August 30

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆ.30ರವರೆಗೂ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಎಲ್ಲ ಸೇವೆಗಳನ್ನು ನಿಷೇಧಿಸಲಾಗಿದೆ.

ವಾರದ ದಿನಗಳಲ್ಲಿ ಬೆಳಗ್ಗೆ 7.00ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ಸುಬ್ರಹ್ಮಣ್ಯ ದೇವರ ದರ್ಶನ ಮಾಡಬಹುದು.

ಭಕ್ತರ ದರ್ಶನದ ಸಂದರ್ಭದಲ್ಲಿ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹಗಳಲ್ಲಿ ತಂಗಲು ಅವಕಾಶವಿದೆ.

ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿ- ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೋವಿಡ್ ಎರಡನೇ ಅಲೆ ವೇಳೆ ಲಾಕ್‌ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳ ಬಾಗಿಲು ಮುಚ್ಚಲಾಗಿತ್ತು. ಪ್ರತಿದಿನ ಅರ್ಚಕರು, ಸಿಬ್ಬಂದಿಗಳು ಮಾತ್ರ ತೆರಳಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ನಂತರ ಅನ್‌ಲಾಕ್ ಘೋಷಣೆಯಾದರೂ ದೇವಾಲಯಗಳಲ್ಲಿ ಹೆಚ್ಚು ಜನರು ಸೇರುವ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಿರಲಿಲ್ಲ. ವಿವಿಧ ಸೇವೆ, ಪ್ರಸಾದ ವಿನಿಯೋಗಕ್ಕೆ ಮಾತ್ರ ಅವಕಾಶ ಕೊಡಲಾಗಿತ್ತು. ಆದರೆ ಸದ್ಯ ಗಡಿ ರಾಜ್ಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವವರಿಗೆ ಕೋವಿಡ್ ಲಸಿಕೆ ಮತ್ತು 72 ಗಂಟೆಯೊಳಗೆ ಆರ್‌ಟಿ- ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ವೇಳೆ ಕೊರೊನಾ ಸೋಂಕು ಹೆಚ್ಚಳದ ಭೀತಿ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕಿದೆ.

ಆದಾಯ ಕುಂಠಿತ
ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 34 ಸಾವಿರ ದೇವಾಲಯಗಳಿವೆ. ಇವುಗಳಲ್ಲಿ ಪ್ರಮುಖ ದೇವಾಲಯಗಳು 144 ಹೆಚ್ಚು ಆದಾಯ ಬರುವ ದೇವಾಲಯವನ್ನು‌ "ಎ' ವರ್ಗಕ್ಕೆ ಸೇರಿಸಲಾಗಿದೆ. ಈ ದೇವಾಲಯಗಳಿಂದ ವಾರ್ಷಿಕ ತಲಾ 25 ಲಕ್ಷ ರೂಪಾಯಿ ಆದಾಯ ಮುಜರಾಯಿ ಇಲಾಖೆಗೆ ಬರುತ್ತಿದೆ.

ಆದರೆ ಕೊರೊನಾ ಎರಡನೇ ಅಲೆ ಬಂದಾಗ ಮಾಡಲಾದ ಲಾಕ್‌ಡೌನ್ ಕಾರಣದಿಂದ ಭಕ್ತರಿಗೆ ಪ್ರವೇಶ ನಿಷೇಧವಾಗಿತ್ತು. ಈ ವೇಳೆ ದೇವಸ್ಥಾನದ ಹುಂಡಿ ಕಾಣಿಕೆಯೂ ಕಡಿಮೆಯಾಗಿದೆ. ಜಾತ್ರೆ, ಧಾರ್ಮಿಕ ಕಾರ್ಯಕ್ರ, ಸೇವೆಗಳು ಬಂದ್ ಆದ ಕಾರಣ ದೇವಾಲಯದ ಆದಾಯವೂ ಕುಂಠಿತವಾಗಿದೆ.

ಕರ್ನಾಟಕದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕುಕ್ಕೆ ಸುಬ್ರಮಣ್ಯ ನಂಬರ್ 1 ಆಗಿದ್ದು, ವಾರ್ಷಿಕ ನೂರು ಕೋಟಿಗೂ ಅಧಿಕ ಆದಾಯ ಈ ದೇವಾಲಯಕ್ಕೆ ಬರುತ್ತದೆ. ಆದರೆ ಲಾಕ್‌ಡೌನ್ ಅವಧಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 22 ಕೋಟಿ ರೂಪಾಯಿ ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+