ಪ್ರವೀಣ್ ನೆಟ್ಟಾರ್ ಪತ್ನಿ ಕೆಲಸದಿಂದ ವಜಾ: ಮರು ನೇಮಕ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ ಕಾಂಗ್ರೆಸ್ ಶಾಸಕ
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ನೀಡಲಾದ ಸರ್ಕಾರಿ ಹುದ್ದೆಯಿಂದ ವಜಾಗೊಳಿಸಿ ರಾಜ್ಯ ಸರ್ಕಾರ ಆದೇಶಗೊಳಿಸಿದೆ. ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ರಾಜ್ಯದಲ್ಲಿ ಸರ್ಕಾರ ಬದಲಾಗಿರೋದರಿಂದ ಈ ಆದೇಶ ಹೊರಡಿಸಲಾಗಿದ್ದು, ಎಲ್ಲಾ ತಾತ್ಕಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕುಮಾರಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಸರ್ಕಾರಿ ಕೆಲಸದಿಂದ ಬಿಡುಗಡೆ ಗೊಳಿಸಿರುವ ಕುರಿತಂತೆ ಆದೇಶದ ಬಗ್ಗೆ ನೂತನ ಕುಮಾರಿ ಅವರಿಗೆ ಸರ್ಕಾರದಿಂದ ಆದೇಶ ಪ್ರತಿ ಬಂದಿದೆ.

2022ರ ಸೆಪ್ಟೆಂಬರ್22 ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅಧಿಕಾರ ಬಳಿಸಿ ಮಾನವೀಯತೆ ದೃಷ್ಠಿಯಿಂದ ಗುತ್ತಿಗೆ ಆಧಾರದಲ್ಲಿ ತಾತ್ಕಲಿಕ ಸರ್ಕಾರಿ ಹುದ್ದೆ ನೀಡಿ ಆದೇಶ ಹೊರಡಿಸಿದ್ದರು. ಈ ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು.
ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಅ.14ರಂದು ನೂತನ ಕುಮಾರಿ ಜಿಲ್ಲಾಧಿಕಾರಿಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.ಈಗ ಸರ್ಕಾರ ಬದಲಾದ್ದರಿಂದ ಕೇವಲ ಏಳು ತಿಂಗಳಲ್ಲೇ ನೂತನ ಕುಮಾರಿ ಅವರು ಕರ್ತವ್ಯವನ್ನು ತ್ಯಜಿಸಬೇಕಾಗಿ ಬಂದಿದೆ.

ನೂತನ ಅವರನ್ನು ಕೆಲಸದಿಂದ ವಜಾಗೊಳಿಸಿರೋದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ಧರಾಮಯ್ಯ ಪಿಎಫ್ಐ ಕೈಗೊಂಬೆಯ ರೀತಿ ವರ್ತಿಸುತ್ತಿದ್ದಾರೆ.ಮಾನವೀಯತೆಯ ಆಧಾರದಲ್ಲಿ ನೀಡಿದ ಕೆಲಸವನ್ನು ಸರ್ಕಾರ ಕಿತ್ತುಕೊಂಡಿದೆ. ತಕ್ಷಣ ಸರ್ಕಾರ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು.ತನ್ನ ಆದೇಶವನ್ನು ಹಿಂಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.
ಇನ್ನು ದ.ಕಜಿಲ್ಲಾಧಿಕಾರಿ ರವಿಕುಮಾರ್ ಎಂಆರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದ ಬದಲಾದಾಗ ತಾತ್ಕಾಲಿಕ ಹುದ್ದೆಗಳಿಂದ ಬಿಡುಗಡೆಗೊಳಿಸೋದು ಸಾಮಾನ್ಯ ವಾದ ಪ್ರಕ್ರಿಯೆ.ಅದರಂತೆಯೇ ನೂತನನ ಅವರನ್ನೂ ಕೆಲಸದಿಂದ ಬಿಡುಗಡೆ ಗೊಳಿಸಲಾಗಿದೆ.ಅವರು ಮರು ಕೆಲಸಕ್ಕೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡೋದಾಗಿ ಜಿಲ್ಲಾಧಿಕಾರಿ ಎಂಆರ್ ರವಿಕುಮಾರ್ ಹೇಳಿದ್ದಾರೆ.
ಇನ್ನು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯಿಸಿ, ನನಗೆ ಈ ವಿಚಾರ ತಿಳಿದಿರಲಿಲ್ಲ.ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜೊತೆ ಮಾತನಾಡುತ್ತೇನೆ.ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications