ಕರಾವಳಿಯಲ್ಲಿ ಡೆಂಗ್ಯೂ, ಮಲೇರಿಯಾ ತಡೆಗೆ ಮುಂಜಾಗ್ರತಾ ಕ್ರಮ
ಮಂಗಳೂರು, ಮೇ 17: ಕರಾವಳಿಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ, ಮಲೇರಿಯಾ ಹಾವಳಿ ಜನರನ್ನು ಕಾಡಲಾರಂಭಿಸುತ್ತವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿರುವಂತೆ ಕಾಣುತ್ತಿದೆ. 2018ರ ಜನವರಿಯಿಂದ ಮೇ ತಿಂಗಳವರೆಗೆ 84 ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿತ್ತು. ಅದೇ 2019ರಿಂದ ಮೇ 15ರವರೆಗೆ ಜಿಲ್ಲೆಯಲ್ಲಿ ಒಟ್ಟು 56 ಡೆಂಗ್ಯೂ ಪ್ರಕರಣ ವರದಿಯಾಗಿದೆ.
2018ರಲ್ಲಿ ಜನವರಿಯಿಂದ ಡಿಸೆಂಬರ್ ವರೆಗೆ ಜಿಲ್ಲೆಯಲ್ಲಿ ಒಟ್ಟು 584 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷ ಮೇ ತಿಂಗಳಿನಲ್ಲಿ ಒಟ್ಟು 46 ಮಂದಿಗೆ ಡೆಂಗ್ಯೂ ಬಾಧಿಸಿತ್ತು. ಈ ವರ್ಷ ಮೇ ತಿಂಗಳಲ್ಲಿ 15ನೇ ತಾರೀಕಿನವರೆಗೆ 9 ಪ್ರಕರಣಗಳು ವರದಿಯಾಗಿವೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ವರ್ಷ 37 ಮಂದಿ ಡೆಂಗ್ಯೂ ಪೀಡಿತರಾಗಿದ್ದು, ಜಿಲ್ಲೆಯ ಇತರ ಭಾಗಗಳಿಗೆ ಹೋಲಿಸಿದರೆ ಅತಿ ಹೆಚ್ಚು ಪ್ರಕರಣಗಳಾಗಿವೆ. ಉಳಿದಂತೆ ಮಂಗಳೂರು ತಾಲೂಕಿನಲ್ಲಿ 9, ಬಂಟ್ವಾಳದಲ್ಲಿ 7, ಬೆಳ್ತಂಗಡಿಯಲ್ಲಿ 2, ಸುಳ್ಯದಲ್ಲಿ ಒಂದು ಪ್ರಕರಣ ವರದಿಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ರ ಜನವರಿಯಿಂದ ಏಪ್ರಿಲ್ವರೆಗೆ 75579 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದ್ದು, ಒಟ್ಟು 575 ಮಂದಿಯಲ್ಲಿ ಮಲೇರಿಯಾ ರೋಗ ಪತ್ತೆಯಾಗಿದೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಗರಿಷ್ಠ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 544 ಮಂದಿ ಬಾಧಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಡೆಂಗ್ಯೂ ಹಾಗೂ ಮಲೇರಿಯಾ ನಿಯಂತ್ರಣ ಕುರಿತಂತೆ ಅವಶ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.












Click it and Unblock the Notifications