ಡೊನಾಲ್ಡ್ ಟ್ರಂಪ್ ಭಾರತ ಭೇಟಿ ವಿರೋಧಿಸಿ ಮೈಸೂರಲ್ಲಿ ಪ್ರತಿಭಟನೆ
ಮೈಸೂರು, ಫೆಬ್ರವರಿ 24: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಹ್ವಾನಿಸಿ ಹೈನುಗಾರಿಕೆ, ಕುಕ್ಕುಟೋದ್ಯಮ ಮುಕ್ತ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕರ್ನಾಟಕ ಪ್ರಾಂತ ರೈತ ಸಂಘದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಭಟನಾಕಾರರು, ""ಈ ಮುಕ್ತ ವ್ಯಾಪಾರ ಒಪ್ಪಂದ ಜಾರಿಯಾದರೆ ಭಾರತಕ್ಕೆ ವಾರ್ಷಿಕ ಅಂದಾಜು 42,000 ಕೋಟಿ ರೂ, ಗಳ ಹೈನು ಉತ್ಪನ್ನಗಳು, ಕೋಳಿ ಉತ್ಪನ್ನಗಳು, ಮತ್ತಿತರ ಕೃಷಿ ಉತ್ಪನ್ನಗಳ ವಸ್ತುಗಳು ಆಮದಾಗಲಿದೆ'' ಎಂದು ಹೇಳಿದರು.
ಸುಮಾರು ನೂರು ಮಿಲಿಯನ್ ಹೈನುಗಾರಿಕಾ ರೈತರು, ಅದರಲ್ಲೂ ಮಹಿಳೆ ಮತ್ತು ಬಡ ರೈತರು ಸರ್ಕಾರದ ನಡೆಯಿಂದ ತೊಂದರೆಗೆ ಒಳಗಾಗುತ್ತಾರೆ. ಹೈನುಗಾರಿಕೆ ಮತ್ತು ಕುಕ್ಕುಟ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರು ಕೂಡ ತಮ್ಮ ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸೇಬು, ಚೆರ್ರಿ, ಬಾದಾಮಿ, ಸೋಯಾಬಿನ್, ಗೋಧಿ, ಜೋಳ ಮೊದಲಾದ ಹಣ್ಣು, ಕಾಳುಗಳ ಮೇಲಿನ ಆಮದು ತೆರಿಗೆಯನ್ನು ಶೇ. ನೂರರಿಂದ ಶೇ.10 ಕ್ಕಿಂತ ಕೆಳಕ್ಕೆ ಇಳಿಸಿದರೆ ನಮ್ಮ ರೈತರ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಭಾರತದ ರೈತರ ಪ್ರತಿಭಟನೆಗಳಿಗೆ ಮಣಿದು ಆರ್ ಸಿಪಿ ಒಪ್ಪಂದಕ್ಕೆ ನಾವು ಸಹಿ ಹಾಕಲ್ಲ ಎಂದು ಹೇಳಿಕೊಂಡ ಬಿಜೆಪಿ ಸರ್ಕಾರ ಈಗ ಹೊಸ ಒಪ್ಪಂದದ ಮೂಲಕ ಆರ್ ಸಿಪಿ ಗಿಂತ ಆಘಾತಕಾರಿ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಆರೋಪಿಸಿದರು.
ಭಾರತದಲ್ಲಿ ಹೈನುಗಾರಿಕೆಯು ಸುಮಾರು ಹತ್ತು ಕೋಟಿ ರೈತಾಪಿ ಕುಟುಂಬಗಳಿಗೆ ಜೀವನೋಪಾಯವಾಗಿದೆ. ಅನೇಕ ವರ್ಷಗಳಿಂದ ಸಹಕಾರಿ ಜಾಲದ ಮೂಲಕ ಕಟ್ಟಿ ಬೆಳೆಸಿದ ಹೈನುಗಾರಿಕೆ ಉದ್ಯಮದಲ್ಲಿ ಹಾಲಿನ ಬೆಲೆಯ ಶೇ.71ರಷ್ಟು ಹಣ ರೈತಾಪಿ ಕುಟುಂಬಗಳಿಗೆ ವಾಪಸ್ಸಾಗುತ್ತಿತ್ತು. ಆದರೆ ಅಮೇರಿಕದ ಬೇಡಿಕೆಯಂತೆ ಹೈನುಗಾರಿಕೆ ಉತ್ಪನ್ನಗಳ ಆಮದಿನ ಮೇಲಿನ ಶೇ.64ತೆರಿಗೆಯನ್ನು ಕಡಿತಗೊಳಿಸಿದರೆ ಭಾರತದ ಹಾಲಿನ ಆಂತರಿಕ ಮಾರುಕಟ್ಟೆ ನೆಲಕಚ್ಚಲಿದೆ.
ಭಾರತದಲ್ಲಿ ಕುಕ್ಕುಟೋದ್ಯಮವು ಸುಮಾರು 48ದಶಲಕ್ಷ ಜನರ ಜೀವನೋಪಾಯವಾಗಿದೆ. ಈ ವಲಯದ ಸಂಘಟಿತ ಮತ್ತು ಅಸಂಘಟಿತ ರೂಪದ ಆದಾಯ ಸುಮಾರು 80,000ಕೋ.ರೂ. ಈಗ ಅಮೇರಿಕಾದಿಂದ ಕಡಿಮೆ ದರದ ಕುಕ್ಕುಟ ಉತ್ಪನ್ನಗಳು ಭಾರತವನ್ನು ಪ್ರವೇಶಿಸುವುದು ಎಂದರೆ ಭಾರತದ ಆಂತರಿಕ ಕುಕ್ಕುಟ ಮಾರುಕಟ್ಟೆಗೆ ಮರಣಶಾಸನ ಬರೆದಂತೆ ಎಂದು ತಿಳಿಸಿದರು.












Click it and Unblock the Notifications