ಮಂಗಳೂರು : ಶುದ್ಧ ಕುಡಿಯುವ ನೀರಿನ ಘಟಕ ಆರಂಭ
ಮಂಗಳೂರು, ಅ.14 : 'ಕರ್ನಾಟಕ ಸರ್ಕಾರ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಥಮ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಲಾಗಿದೆ' ಎಂದು ಶಾಸಕ ಮೊಯಿದ್ದೀನ್ ಬಾವಾ ಹೇಳಿದರು.
ವಾಮಂಜೂರು-ನಿರಾಳ ಬಳಿ ಗ್ರಾಮೀಣ ಅಭಿವೃದ್ಧಿ ಇಲಾಖೆ ವತಿಯಿಂದ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕರು ಉದ್ಘಾಟಿಸಿದರು. '2ರೂ. ನಾಣ್ಯ ಹಾಕಿದರೆ ಇಪ್ಪತ್ತು ಲೀಟರ್ ಶುದ್ಧ ಕುಡಿಯುವ ನೀರು ಸಿಗುತ್ತದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬೆಳೆಯುವ ಮಕ್ಕಳಿಗೆ ಶುದ್ಧ ನೀರು ಒದಗಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಕಾಳಜಿ ವಹಿಸಬೇಕು' ಎಂದು ಕರೆ ನೀಡಿದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆಯುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದಾರೆ. ಇದೀಗ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಸಿಗುವಂತಾಗಿದೆ. ರಾಜ್ಯದಾದ್ಯಂತ ಇಂತಹ ಘಟಕಗಳು ಹಂತಹಂತವಾಗಿ ನಿರ್ಮಾಣವಾಗುತ್ತಿವೆ' ಎಂದರು.
ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು 5 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಐದು ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕ್ ಅಳವಡಿಸಲಾಗಿದೆ. ಎರಡು ರೂಪಾಯಿ ನಾಣ್ಯ ಹಾಕಿದರೆ ಇಪ್ಪತ್ತು ಲೀಟರ್ ಶುದ್ಧ ಕುಡಿಯುವ ನೀರು ಲಭ್ಯವಾಗುತ್ತದೆ.

ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಡ್ಯಾರು, ಅರ್ಕುಳ, ಹಳ್ಳಿಯ ಬೆಟ್ಟು, ಮಲ್ಲೂರು ನೀರುಮಾರ್ಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಲಿದೆ.












Click it and Unblock the Notifications