ಪುತ್ತೂರು ಮಹಾಲಿಂಗೇಶ್ವರ ಜಾತ್ರೆ ವಿವಾದಕ್ಕೆ ತೆರೆ ಎಳೆದ ಹೈಕೋರ್ಟ್
ಬೆಂಗಳೂರು, ಮಾರ್ಚ್ 30 : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಪಾಲ್ಗೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಹೆಸರಿಲ್ಲದ ಹೊಸ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವಂತೆ ಸೂಚನೆ ನೀಡಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಭಕ್ತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಕೋರ್ಟ್ ಬುಧವಾರ ಈ ಆದೇಶ ನೀಡಿದೆ. ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ. ರವಿಮಳಿಮಠ ಅವರಿದ್ದ ಪೀಠ ಎ.ಬಿ.ಇಬ್ರಾಹಿಂ ಅವರು ಜಾತ್ರೆಯಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಆದೇಶಿಸಿ, ಪಿಐಎಲ್ ಇತ್ಯರ್ಥ ಪಡಿಸಿದೆ. [ಮುಸ್ಲಿಂ ಡಿಸಿ ಹೆಸರು ಮತ್ತು ಪುತ್ತೂರು ದೇವಾಲಯದ ವಿವಾದ]

ಏನಿದು ವಿವಾದ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹೆಸರು ಹಾಕಲಾಗಿತ್ತು. ಹಿಂದೂಯೇತರರಾದ ಜಿಲ್ಲಾಧಿಕಾರಿಯನ್ನು ಜಾತ್ರೆಗೆ ಕರೆಯುವುದು ಸರಿಯಲ್ಲ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಭಕ್ತರು ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. [ಪುತ್ತೂರು ದೇವಾಲಯ ವಿವಾದ : ಜಿಲ್ಲಾಧಿಕಾರಿ ಸ್ಪಷ್ಟನೆಗಳು]
ಹೇಳಿಕೆ ನೀಡಿದ ಸರ್ಕಾರ : ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಸರ್ಕಾರ ತಪ್ಪಿನಿಂದಾಗಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ ಎಂದು ಹೇಳಿಕೆ ನೀಡಿತು. ಹೇಳಿಕೆಯನ್ನು ಪರಿಗಣನೆ ಮಾಡಿದ ಕೋರ್ಟ್ ಆಮಂತ್ರಣ ಪತ್ರಿಕೆಗಳನ್ನು ಮರು ಮುದ್ರಣ ಮಾಡುವಂತೆ ಸೂಚನೆ ನೀಡಿತು. ಜಿಲ್ಲಾಧಿಕಾರಿಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಆದೇಶಿಸಿತು. [ಜಾತ್ರೋತ್ಸವಕ್ಕೂ ಮುನ್ನ ಪುತ್ತೂರಿನಲ್ಲಿ ಎದ್ದ ಚಪ್ಪರ ವಿವಾದ]
ಜಿಲ್ಲಾಧಿಕಾರಿಗಳ ಸ್ಪಷ್ಟನೆ : ಏಪ್ರಿಲ್ 10 ರಿಂದ 20ರ ತನಕ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. 'ನಾನು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದಿಲ್ಲ. ಅಪರ ಜಿಲ್ಲಾಧಿಕಾರಿ ಅವರು ಉತ್ಸವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ' ಎಂದು ಇಬ್ರಾಹಿಂ ಅವರು ಕಳೆದ ವಾರ ಸ್ಪಷ್ಟಪಡಿಸಿದ್ದರು.
ಪ್ರತಿ ವರ್ಷದಂತೆ ಏಪ್ರಿಲ್ 1ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಗೊನೆ ಮುಹೂರ್ತ ನಡೆಯುತ್ತದೆ. 10ರಂದು ಧ್ವಜಾರೋಹಣ ನಡೆದು, ಪೇಟೆ ಸವಾರಿ, ಕಟ್ಟೆ ಪೂಜೆ ನಡೆಯುತ್ತದೆ. 16ರಂದು ಬಲ್ನಾಡು ಶ್ರೀ ಉಳ್ಳಾಲ್ತಿ ಭಂಡಾರ ಆಗಮನ, 17ರಂದು ಬ್ರಹ್ಮರಥೋತ್ಸವ, ಪುತ್ತೂರು ಬೆಡಿ, 18ರಂದು ಅವಭೃತ, 19ರಂದು ಧ್ವಜಾವರೋಹಣ ನಡೆಯಲಿದೆ.












Click it and Unblock the Notifications