ಜ.19ರಂದು ಪುತ್ತೂರಿನ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಚಾಲನೆ
ಮಂಗಳೂರು, ಜನವರಿ 18: ಪುತ್ತೂರಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಕ್ಷಣಗಣನೆ ಆರಂಭಗೊಂಡಿದೆ. 26 ವರ್ಷದ ಹೊನಲು ಬೆಳಕಿನ ಪುತ್ತೂರು 'ಕೋಟಿ-ಚೆನ್ನಯ' ಜೋಡುಕರೆ ಕಂಬಳ ನಾಳೆ ಜ.19ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಗೌರವಾಧ್ಯಕ್ಷತೆಯಲ್ಲಿ 25ನೇ ವರ್ಷದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಕಂಬಳವನ್ನು ವಿಶೇಷ ರೀತಿಯಲ್ಲಿ ನಡೆಸಲಾಗುತ್ತಿದೆ. ಈ ಬಾರಿಯ ಕಂಬಳಕ್ಕೆ ಕಂಬಳದ ಕರೆ ಸಹಿತ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಈ ಬಾರಿ 150 ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ.
ನಾಳೆ 19ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷತೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಕಂಬಳ ಉದ್ಘಾಟಿಸಲಿದ್ದಾರೆ.

ವಿಶೇಷವಾಗಿ ಕಂಬಳದ ಯಶಸ್ಸಿಗಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನ, ಕಾನತ್ತೂರು ದೈವಸ್ಥಾನಗಳಲ್ಲಿ ಪ್ರಾರ್ಥಿಸಿ ಪ್ರಸಾದ ತರಲಾಗಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಅನುಗ್ರಹಕ್ಕಾಗಿ ಪ್ರಾರ್ಥಿಸಿದ ನಂತರವೇ ಈ ಕಂಬಳಕ್ಕೆ ಚಾಲನೆ ದೊರೆಯುತ್ತದೆ.

ಈ ಕಂಬಳದಲ್ಲಿ ಜಯಕರ್ನಾಟಕ ಸಂಸ್ಥಾಪಕ, ಉದ್ಯಮಿ ಎನ್. ಮುತ್ತಪ್ಪ ರೈ ಹಾಗೂ ಅನುರಾಧ ಮುತ್ತಪ್ಪ ರೈ ಪಾಲ್ಗೊಳ್ಳಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ, ಎಂಎಲ್ ಸಿ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.











Click it and Unblock the Notifications