ಕರಾವಳಿಯಲ್ಲಿ ಮತ್ತೆ ಮಳೆ ಅಬ್ಬರ; ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ
ಮಂಗಳೂರು, ಮೇ 7: ರಾಜ್ಯದ ಕರಾವಳಿಯಲ್ಲಿ ಮುಂಗಾರು ಪೂರ್ವ ಅಬ್ಬರಿಸುತ್ತಿದೆ. ಕಳೆದ ಮೂರು ವಾರಗಳಿಂದ ರಾಜ್ಯದ ಕರಾವಳಿಯಾದ್ಯಾಂತ ಸಂಜೆ ವೇಳೆಗೆ ನಿರಂತರ ಮಳೆಯಾಗುತ್ತಿದ್ದು, ಮೇ ತಿಂಗಳಿನಲ್ಲೂ ಮಳೆ ಸುರಿಯುವ ಸಾಧ್ಯತೆಗಳಿವೆ.
ಜೂನ್ 1ನೇ ತಾರೀಖು ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿ ಜೂನ್ 10ರಿಂದ ಮುಂಗಾರು ಆರಂಭವಾಗುವ ಸಾಧ್ಯತೆಗಳನ್ನು ಹವಾಮಾನ ಇಲಾಖೆ ಸೂಚಿಸಿದೆ.
ಮೇ 10ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮುಂಗಾರು ಪೂರ್ವ ಮಳೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 10ನೇ ತಾರೀಖಿನ ತನಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಆನಂತರವೂ ಸಾಧಾರಣ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ಸೂಚಿಸಿದೆ. ಈ ಬಗ್ಗೆ ತನ್ನ ಅಧೀಕೃತ ವೆಬ್ ಸೈಟ್ ನಲ್ಲಿ ನೀಲನಕ್ಷೆ ಪ್ರಕಟಗೊಳಿಸಿರುವ ಹವಾಮಾನ ಇಲಾಖೆ, ಮಳೆ ಬಿರುಸು ಪಡೆಯುವ ಬಗ್ಗೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ, ಪುತ್ತೂರು ತಾಲೂಕಿನ ವಿವಿಧೆಡೆ ಇಂದೂ ಕೂಡಾ ಮಳೆ ಮುಂದುವರೆದಿದ್ದು, ಗಾಳಿ ಮಳೆಗೆ ಕೆಲವು ಕಡೆಗಳಲ್ಲಿ ಅಡಿಕೆ ಮರಗಳು ಧರಾಶಾಹಿಯಾಗಿವೆ.