ಕ್ಷಣ ಕ್ಷಣಕ್ಕೂ ಏರುತ್ತಿದ್ದಾಳೆ ನೇತ್ರಾವತಿ, ತೀರದ ಮನೆಗಳ ಪಾಡೇನು?
ಮಂಗಳೂರು, ಆಗಸ್ಟ್ 9: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳ ಸೇರಿದಂತೆ ಇತರೆಡೆ ನೇತ್ರಾವತಿ ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉಪ್ಪಿನಂಗಡಿ, ಬಂಟ್ವಾಳ ಸೇರಿದಂತೆ ಮಂಗಳೂರಿನ ನೇತ್ರಾವತಿ ನದಿ ತೀರದ ಎರಡೂ ಬದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಕ್ಷಣದಿಂದಲೇ ತಮ್ಮ ಕುಟುಂಬದೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರುಲುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭಾರೀ ಮಳೆಯಿಂದ ಅಣಿಯೂರು ಹಳ್ಳ ತುಂಬಿ ಹರಿಯುತ್ತಿದ್ದು, ಅಣಿಯೂರಿನ ಕಾಟಾಜೆ ಎಂಬಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ವೃದ್ಧರೊಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅದಲ್ಲದೇ ಜಾನುವಾರುಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಪಾಯ ಮಟ್ಟ ಮೀರಿ ನದಿ ಹೊಳೆಗಳು ಹರಿಯುತ್ತಿವೆ. ಧರ್ಮಸ್ಥಳದ ಪುದುವೆಟ್ಟುವಿನ ಅಣಿಯೂರು ಹೊಳೆ ತುಂಬಿ ಹರಿಯುತ್ತಿದ್ದು ಗ್ರಾಮದ 10 ಮನೆಗಳಿಗೆ ಅಣಿಯೂರು ಹೊಳೆ ನೀರು ನುಗ್ಗಿದ್ದು ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.












Click it and Unblock the Notifications