ಜಗದೀಶ್ ಕಾರಂತ್ ವಿರುದ್ಧ ಕೇಸ್ ದಾಖಲಿಸಲು ರಾಮಲಿಂಗಾ ರೆಡ್ಡಿ ಸೂಚನೆ
ಮಂಗಳೂರು, ಸೆಪ್ಟೆಂಬರ್ 20: ಪುತ್ತೂರಿನಲ್ಲಿ ಸಂಪ್ಯಾ ಸಬ್ ಇನ್ಸ್ಪೆಕ್ಟರ್ ಖಾದರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನ ನೀಡಿರುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇಂದು ಮಂಗಳೂರಿಗೆ ಭೇಟಿ ನೀಡಿದ್ದ ರಾಮಲಿಂಗಾ ರೆಡ್ಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಲಯ ಹಾಗೂ ಕಮಿಷನರೇಟ್ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿವರ ನೀಡಿದ್ದಾರೆ.

ಈ ವೇಳೆ ಅವರು, "ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ," ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು .
ಶುಕ್ರವಾರ ಪುತ್ತೂರಿನಲ್ಲಿ ಭಾಷಣ ಮಾಡಿದ್ದ ಜಗದೀಶ್ ಕಾರಂತ್ "ಸಂಪ್ಯ ಠಾಣೆಯ ಎಸ್ಐ ಖಾದರ್ ಅವರನ್ನು ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ ಪುತ್ತೂರು ಬಸ್ ಸ್ಟ್ಯಾಂಡ್ ನಲ್ಲಿ ಯಾಕೆ ಓಡಿಸಬಾರದು. ನಾನು ಓರ್ವ ಹಿಂದೂವಾಗಿ ನಿನಗೆ ರಸ್ತೆಯಲ್ಲಿ ಕಲ್ಲು ಹೊಡೆದು ನಿನ್ನನ್ನು ಹುಚ್ಚು ನಾಯಿಯಂತೆ ಯಾಕೆ ಅಟ್ಟಾಡಿಸಬಾರದು ? ನಿನ್ನ ತಲೆಯನ್ನು ಬೋಳಿಸಿ ಕತ್ತೆಯ ಮೇಲೆ ಕೂರಿಸಿ ಪುತ್ತೂರಿನಲ್ಲಿ ಮೆರವಣಿಗೆ ಮಾಡುವುದು ನಮಗೆ ಲೆಕ್ಕವೇ ಅಲ್ಲ," ಎಂದು ಕೀಳು ಮಟ್ಟದ ಭಾಷಣ ಮಾಡಿದ್ದರು.
ಸದ್ಯದಲ್ಲೇ ಗೌರಿ ಹಂತಕರ ಬಂಧನ
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಶೀಘ್ರದಲ್ಲೇ ಪ್ರಕರಣ ಭೇದಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪುರಾವೆಗಳು ಸಿಕ್ಕಿವೆ ಅದನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಅವರು ಹೇಳಿದ್ದಾರೆ.
ಇನ್ನು ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದ ತನಿಖೆ ಪೂರ್ಣಗೊಂಡಿದೆ .ಪ್ರಕರಣದ ನೈಜ ವಿಷಯ ಶೀಘ್ರದಲ್ಲಿಯೇ ಹೊರ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications