ಸೂಲಿಬೆಲೆ ವಿರುದ್ಧ ಅವಹೇಳನಕಾರಿ ಹೇಳಿಕೆ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಮಾನಾಥ ರೈ
ಮಂಗಳೂರು, ಆಗಸ್ಟ್ 30: ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ರಮಾನಾಥ ರೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಯಡಿಯೂರಪ್ಪ, ಅಪ್ಪ ಅಲ್ಲ ಅಜ್ಜ - ರಮಾನಾಥ್ ರೈ
2017ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಸಮಯದಲ್ಲಿ ರಮಾನಾಥ ರೈ ಕಾರ್ಯಕ್ರಮವೊಂದರಲ್ಲಿ ಸಭೆಯನ್ನು ಉದ್ಧೇಶಿಸಿ ಮಾತನಾಡುತ್ತಾ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದರು. ಇದರ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡ ರಹೀಂ ಉಚ್ಚಿಲ್ ರಮಾನಾಥ್ ರೈ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಇದರಂತೆ ಮಂಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಾಲಯವು ಕಳೆದ ಜೂನ್ ನಲ್ಲಿ ಐಪಿಸಿ ಸೆಕ್ಷನ್ 500, 504ರಂತೆ ಪ್ರಕರಣ ದಾಖಲಿಸಿತ್ತು. ಇದಿಗ ಪ್ರಕರಣ ರದ್ಧತಿ ಕೋರಿ ಮಾಜಿ ಸಚಿವ ರಮಾನಾಥ ರೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.