ಬಿಜೆಪಿ ವೈಫಲ್ಯಗಳನ್ನು ಬಹಿರಂಗಪಡಿಸಲು ಮುಂದಾದ ರಮಾನಾಥ್ ರೈ
ಮಂಗಳೂರು, ಜನವರಿ 4: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ರಮಾನಾಥ್ ರೈ ಬಿಜೆಪಿ ವೈಫಲ್ಯಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ. ಬೆಂಗಳೂರು- ಮಂಗಳೂರು ನಡುವೆ ಅಡ್ಡಹೊಳೆಯಿಂದ ಬಿ.ಸಿ.ರೋಡ್ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಕ್ಷಣ ಆರಂಭಿಸಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡದ ಅವರು ಸ್ಥಗಿತಗೊಂಡಿರುವ ಅಡ್ಡಹೊಳೆಯಿಂದ ಬಿ.ಸಿ.ರೋಡ್ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಕ್ಷಣ ಆರಂಭಿಸಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜನವರಿ 14ರಿಂದ 16ರವರೆಗೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ನೆಲ್ಯಾಡಿಯಿಂದ ಬಿ.ಸಿ.ರೋಡ್ವರೆಗೆ ಈ ಪಾದಯಾತ್ರೆ ನಡೆಯಲಿದ್ದು, ಪಕ್ಷದ ಹಿರಿಯ ಮುಖಂಡರು ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಶಬರಿಮಲೆ ವಿವಾದದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ರಮಾನಾಥ್ ರೈ ಸುಪ್ರೀಂ ಕೋರ್ಟ್ ತೀರ್ಪು ಹಾಗೂ ಅಲ್ಲಿನ ವಿದ್ಯಮಾನಗಳ ಸಾಧಕ ಬಾಧಕಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಯುವಕನಾಗಿದ್ದ ವೇಳೆ 18ಕ್ಕೂ ಅಧಿಕ ಬಾರಿ ವ್ರತಾಧಾರಣೆಯೊಂದಿಗೆ ಶಬರಿಮಲೆಗೆ ಭೇಟಿ ನೀಡಿದವ ನಾನು. ಸೌಹಾರ್ದ, ಸಾಮರಸ್ಯ, ಭಕ್ತಿ, ವಿಶ್ವಾಸ, ನಂಬಿಕೆಯ ದೃಷ್ಟಿಯಲ್ಲಿ ಅಲ್ಲಿಗೆ ಭೇಟಿ ನೀಡಿದ್ದೇನೆ. ಇದೀಗ ಅಲ್ಲಿನ ಸಾಧಕ ಬಾಧಕಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆ ವಿಷಯದಲ್ಲಿ ರಾಜಕೀಯ ಬೇಡ ಎಂದು ಸ್ಪಷ್ಟಪಡಿಸಿದರು.












Click it and Unblock the Notifications