ಮಂಗಳೂರಲ್ಲಿ ವೀರಪ್ಪ ಮೊಯ್ಲಿ ವಿರುದ್ಧ ಕಪ್ಪು ಬಾವುಟ ಪ್ರದರ್ಶನ
ಮಂಗಳೂರು, ಸೆಪ್ಟೆಂಬರ್, 12 : ಎತ್ತಿನಹೊಳೆ ಯೋಜನೆಯನ್ನು ಕೈ ಬಿಡಬೇಕೆಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರನ್ನು ಆಗ್ರಹ ಪಡಿಸಿದ ಸಹ್ಯಾದ್ರಿ ಸಂರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದ್ದು, ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಶನಿವಾರ ನಡೆದಿದೆ.
ಶಕ್ತಿ ನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೋಯ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮ ಮುಗಿಸಿ ತೆರಳುತ್ತಿರುವ ವೇಳೆಯಲ್ಲಿ ಈ ಘಟನೆ ಸಂಭವಿಸಿದ್ದು, ಕೆಲವು ಗಂಟೆಗಳ ಕಾಲ ಬಿಗುವಿನ ವಾತಾವರಣ ತಲೆದೋರಿತ್ತು.[ನೇತ್ರಾವತಿ ಉಳಿಸಲು ಸೆ.19ರಂದು ದಿನಪೂರ್ತಿ ಹೆದ್ದಾರಿ ಬಂದ್ ]
ವೀರಪ್ಪ ಮೊಯ್ಲಿ ಅವರು ಬಂದಂತಹ ಸಂದರ್ಭದಲ್ಲಿ ಆಗಮಿಸಿದ ದಿನೇಶ್ ಹೊಳ್ಳ ನೇತೃತ್ವದ ತಂಡ ಎತ್ತಿನಹೊಳೆ ಯೋಜನೆಯನ್ನು ಕೈಬಿಡಬೇಕೆಂದು ಮನವಿ ಪತ್ರ ಸಲ್ಲಿಸಿದರು. ಆದರೆ ಮೊಯ್ಲಿ ಅವರು ವಿರೋಧದ ಪ್ರತಿಕ್ರಿಯೆ ನೀಡಿದರು.
ಎತ್ತಿನಹೊಳೆ ಯೋಜನೆಯನ್ನು ಸಮರ್ಥಿಸಿಕೊಂಡ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಯ ಶಂಕು ಸ್ಥಾಪನೆ ನಡೆಸಿದ್ದಾರೆ. ಈ ಹಂತದಲ್ಲಿ ನಾನು ಏನು ಮಾಡಲು ಸಾಧ್ಯವಿಲ್ಲ. ಜನತೆಗೆ ಕುಡಿಯುವ ನೀರನ್ನು ಒದಗಿಸುವುದಷ್ಟೇ ನಮ್ಮ ಉದ್ದೇಶ ಎಂದು ಹೇಳಿದ್ದಾರೆ.
ಸಚಿವರಿಂದ ಈ ಮಾತನ್ನು ನಿರೀಕ್ಷದ ಕಾರ್ಯಕರ್ತರು ಸ್ಥಳದಲ್ಲೇ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಒಂದಿಬ್ಬರು ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.