ಮಂಗಳೂರು : ಮೀನಿನ ಲಾರಿಯಲ್ಲಿ ಅಕ್ರಮ ಮರಳು ಸಾಗಾಟ
ಮಂಗಳೂರು, ಮಾರ್ಚ್ 25 : ಮೀನು ಸಾಗಿಸುವ ಕಂಟೈನರ್ ಲಾರಿಯಲ್ಲಿ ಅಪಾರ ಪ್ರಮಾಣದ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ರಾತ್ರಿ ಸಮಯದಲ್ಲಿ ಉಳ್ಳಾಲದ ಮೂಲಕ ಅಪಾರ ಪ್ರಮಾಣದಲ್ಲಿ ಕೇರಳಕ್ಕೆ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಕುರಿತು ಉಳ್ಳಾಲ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.
ಈ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಹೊಯಿಗೆ ಹಿತ್ಲು ಎಂಬಲ್ಲಿ ದಾಳಿ ನಡೆಸಿದ ಪೊಲೀಸರ ತಂಡ, ಮೀನು ಸಾಗಾಟ ಲಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಮರಳು ತುಂಬಿಸಿರುವುದನ್ನು ಪತ್ತೆ ಮಾಡಿದ್ದಾರೆ.
ಕಂಟೈನರ್ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದರೂ ಹೊರನೋಟಕ್ಕೆ ಮೀನು ಸಾಗಾಟ ಮಾಡುವ ರೀತಿಯಲ್ಲಿ ಕಾಣುತ್ತಿತ್ತು. ಮರಳನ್ನು ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ದಾಳಿ ಸಂದರ್ಭದಲ್ಲಿ ಮೀನಿನ ಕಂಟೈನರ್ ಲಾರಿ ಮತ್ತು ಸ್ಥಳದಲ್ಲಿ ಮರಳು ಸಾಗಾಟಕ್ಕೆ ಉಪಯೋಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಮಾರು 4 ಯುನಿಟ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ವಶ ಪಡಿಸಿಕೊಂಡಿರುವ ಮರಳು ಹಾಗೂ ವಾಹನಗಳ ಅಂದಾಜು ಒಟ್ಟು ಮೌಲ್ಯ 15 ಲಕ್ಷ ರೂಪಾಯಿ ಎಂದು ಹೇಳಲಾಗಿದೆ. ಕಳೆದ ಹಲವಾರು ಸಮಯದಿಂದ ಈ ಅಕ್ರಮ ನಡೆಸಾಗುತ್ತಿದೆ ಎಂದು ತಿಳಿದುಬಂದಿದೆ.