ನೀರಿನ ಅಭಾವದ ನಡುವೆ ಶಾಲೆಗಳು ಪುನಾರಂಭ
ಮಂಗಳೂರು, ಮೇ 29: ಎರಡು ತಿಂಗಳ ರಜೆಯ ಮಜಾ ಕೊನೆಗೊಂಡಿದೆ. ಇಂದಿನಿಂದ ನಾಡಿನೆಲ್ಲೆಡೆ ಶಾಲೆಗಳು ಆರಂಭಗೊಳ್ಳುತ್ತಿವೆ. ಭರ್ಜರಿ ರಜೆಯ ಖುಷಿಯಲ್ಲಿ ದಿನ ಕಳೆಯುತ್ತಿದ್ದ ಮಕ್ಕಳೆಲ್ಲ ಹೊಸ ಸಮವಸ್ತ್ರ ತೊಟ್ಟು ಈಗ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ.
ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿರುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಟ್ಯಾಂಕರ್ ಗಳಿಂದ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಮಂಗಳೂರು ನಗರದಲ್ಲಿ ನೀರಿನ ರೇಷನ್ ವ್ಯವಸ್ಥೆಯಡಿ 4 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತದೆ. ನೀರಿನ ಸಮಸ್ಯೆಯ ಮಧ್ಯೆ ಶಾಲೆಗಳು ಇಂದು ಪ್ರಾರಂಭಗೊಂಡಿವೆ.

ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಧ್ಯಾಹ್ನದ ಬಳಿಕ ರಜೆ ನೀಡಬೇಕು ಎಂಬ ಒತ್ತಾಯ ಕೂಡ ಕೇಳಿಬರುತ್ತಿದೆ. ಆದರೆ ಯಾವುದೇ ನಿರ್ದೇಶನಗಳು ಸರಕಾರದಿಂದ ಬಂದಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಈಗಾಗಲೇ ಕೆಲವು ಶಾಲೆಗಳ ಮುಖ್ಯಸ್ಥರು ನೀರಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದು, ಅಂತಹ ಶಾಲೆಗಳಿಗೆ ಅಗತ್ಯಕ್ಕನುಸಾರವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications