ಚುನಾವಣೆ ಹಿನ್ನೆಲೆ:ದಕ್ಷಿಣ ಕನ್ನಡದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ
ಮಂಗಳೂರು, ಏಪ್ರಿಲ್ 17: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ (ಏ.16) ಸಂಜೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಏಪ್ರಿಲ್ 18 ರಂದು ನಡೆಯಲಿರುವ ಮಹಾಮತ ದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಿದ್ಧವಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ 16ರ ಸಂಜೆ 6ರಿಂದ ಏಪ್ರಿಲ್ 19ರ ಸಂಜೆ 6ರವರೆಗೆ ಜಿಲ್ಲೆಯಾದ್ಯಂತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬುಧವಾರದಿಂದ (ಏ.16) ಮನೆ ಮನೆ ಪ್ರಚಾರ ಆರಂಭಗೊಂಡಿದೆ.
ದಕ್ಷಿಣ ಕನ್ನಡದ ಅಖಾಡ ಹೇಗಿದೆ? ನಳಿನ್, ಮಿಥುನ್ ರೈ ಪ್ಲಸ್-ಮೈನಸ್ ಏನು?
ಮಂಗಳವಾರ ಮಧ್ಯರಾತ್ರಿಯಿಂದ ಮತದಾನದ ದಿನ ಏಪ್ರಿಲ್ 18ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ - ಕೇರಳ ಗಡಿ ಪ್ರದೇಶದಲ್ಲಿ ಪೊಲೀಸ್ ಕಣ್ಗಾವಲು ಹಾಕಲಾಗಿದೆ.
ಈ ನಿಷೇಧಿತ ಅವಧಿಯಲ್ಲಿ ಯಾವುದೇ ಬಹಿರಂಗ ಸಾರ್ವಜನಿಕ ಸಭೆ, ಸಮಾರಂಭ, ಜಾಥಾ, ಮೆರವಣಿಗೆ ಇತ್ಯಾದಿಗಳನ್ನು ನಡೆಸುವುದನ್ನು ನಿರ್ಭಂಧಿಸಲಾಗಿದೆ. ಸಾರ್ವಜನಿಕರು ಸಕಾರಣ ಇಲ್ಲದೆ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ನಿಷೇಧಿಸಲಾಗಿದೆ. ಆದರೆ ನಾಲ್ಕು ಜನರಿಗೆ ಮೀರದಂತೆ ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ.
ಲೋಕಸಭಾ ಚುನಾವಣೆ ಹಿನ್ನೆಲೆ:ದಕ್ಷಿಣ ಕನ್ನಡದ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ
ಮಾರಕ ಆಯುಧಗಳನ್ನು ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಸಂಜ್ಞೆ ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣ ಪತ್ರಿಕೆಗಳ ಅಥವಾ ಇತರೆ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿ ಚಿತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೆ ಪ್ರೇರಿಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.
ಈ ಸಮಾರಂಭಗಳಿಗೆ ನಿಷೇಧಾಜ್ಞೆ ಅನ್ವಯಿಸುವುದಿಲ್ಲ
ಈ ಆದೇಶವು ಮತದಾನ ನಡೆಯುವ ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಲಿನಲ್ಲಿ ನಿಲ್ಲುವ ಮತದಾರರಿಗೆ ಅನ್ವಯಿಸುವುದಿಲ್ಲ. ಮತದಾನ ದಿನದಂದು ಮತಗಟ್ಟೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಚುನಾವಣಾ ಪ್ರಚಾರ/ ಘೋಷಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ನಿಷೇಧಾಜ್ಞೆಯು ಖಾಸಗಿ ಕಾರ್ಯಕ್ರಮಗಳಾದ ಮದುವೆ ಗೃಹಪ್ರವೇಶ ಇತರ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ-ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಪೊಲೀಸ್ ಸಿಬ್ಬಂದಿಗಳು ಕಾರ್ಯನಿರ್ವಹಣೆಯ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಬ್ಯಾಂಕ್/ ಎ.ಟಿ.ಎಂ ಭದ್ರತಾ ಸಿಬ್ಬಂದಿಗಳು ಮತ್ತು ಚುನಾವಣಾ ಕರ್ತವ್ಯದಲ್ಲಿ ನಿರತವಾಗಿರುವ ಸಿಬ್ಬಂದಿಗಳು ಮತ್ತು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ.
ತುರ್ತು ವೈದ್ಯಕೀಯ ನೆರವಿನ ಕಿಟ್ ವಿತರಣೆ
ಜಿಲ್ಲೆಯಲ್ಲಿರುವ 1,861 ಮತಗಟ್ಟೆಗಳಿಗೆ ತೆರಳಲು 7 ಅಸೆಂಬ್ಲಿ ಕ್ಷೇತ್ರಗಳಲ್ಲಿ ಮಸ್ಟರಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ ಎಲ್ಲಾ ಮತಗಟ್ಟೆಗಳನ್ನು ಮತದಾನಕ್ಕೆ ಸಜ್ಜುಗೊಳಿಸಲಾಗಿದೆ. ಮತಗಟ್ಟೆ ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದ್ದು, ಯಾವುದೇ ಗೊಂದಲ ಆಗದಂತೆ ಮತದಾನ ಪ್ರಕ್ರಿಯೆಗೆ ನೆರವಾಗಲಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಕಡೆಗಳಿಗೆ ಚುನಾವಣಾ ಕಾರ್ಯಕ್ಕೆ ತೆರಳಲು 79 ವಾಹನಗಳನ್ನು ನಿಯೋಜಿಸಲಾಗಿದೆ. ಒಟ್ಟು 668 ವಾಹನಗಳು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿವೆ. ಮತಗಟ್ಟೆಗೆ ತೆರಳುವ ಎಲ್ಲಾ 8,920 ಸಿಬ್ಬಂದಿಗೆ ಅಗತ್ಯ ವಸ್ತುಗಳ ಕಿಟ್ ಬಾಕ್ಸ್ ಹಾಗೂ ತುರ್ತು ವೈದ್ಯಕೀಯ ನೆರವಿನ ಕಿಟ್ ಅನ್ನು ವಿತರಿಸಲಾಗುತ್ತಿದೆ.
ಅಗತ್ಯ ಮತಗಟ್ಟೆಗೆ 6 ಸಿಪಿಎಂಎಫ್ ತುಕಡಿಗಳು
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಇರುವ ಆಯ್ದ 110 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ನಡೆಸಲಾಗಿದೆ. 95 ಹ್ಯಾಂಡಿಕ್ಯಾಮ್ ಮೂಲಕ ಚಿತ್ರೀಕರಣ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 300 ಮಂದಿ ಮೈಕ್ರೋ ಅಬ್ಸರ್ವರ್ ಗಳು ಚುನಾವಣೆ ಮೇಲೆ ನಿಗಾ ಇರಿಸಲಿದ್ದಾರೆ. ಮತಗಟ್ಟೆಗಳಿಗೆ ಗರಿಷ್ಟ ಪ್ರಮಾಣದ ಭದ್ರತೆಯನ್ನು ಒದಗಿಸಲಾಗಿದ್ದು , 6 ಸಿಪಿಎಂಎಫ್ ತುಕಡಿಗಳನ್ನು ಕರೆಸಲಾಗಿದೆ. ಇವುಗಳನ್ನು ಅಗತ್ಯ ಮತಗಟ್ಟೆಗೆ ಹಂಚಿಕೆ ಮಾಡಲಾಗುತ್ತದೆ.
ಸಖಿ ಮತಗಟ್ಟೆಗಳು 20
ದ.ಕ. ಜಿಲ್ಲೆಯಲ್ಲಿ ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿರುವ 20 ಮತಗಟ್ಟೆಗಳನ್ನು ಸಖಿ ಮತಗಟ್ಟೆಗಳಾಗಿ ಗುರುತಿಸಲಾಗಿದೆ. ಅಲ್ಲಿನ ಸಿಬ್ಬಂದಿ ಮಹಿಳೆಯರಾಗಿರಲಿದ್ದಾರೆ . ಐದು ಮತಗಟ್ಟೆಗಳನ್ನು ಸಾಂಪ್ರದಾಯಿಕ ಹಾಗೂ ಮೂರು ಮತಗಟ್ಟೆಗಳನ್ನು ವಿಶೇಷವಾಗಿ ವಿಕಲಚೇತನರಿಗಾಗಿ ಸಜ್ಜುಗೊಳಿಸಲಾಗಿದೆ.