ಕರಾವಳಿ ತ್ರಿವಳಿ ಕೊಲೆ: ಹಂತಕರನ್ನು ಬಂಧಿಸಲು ಸರಕಾರಕ್ಕೆ ಆಗಸ್ಟ್ 5ರ ಗಡುವು ನೀಡಿದ ಎಚ್ಡಿಕೆ
ಮಂಗಳೂರು, ಆಗಸ್ಟ್ 1: ಕರಾವಳಿಯಲ್ಲಿ 2 ವಾರಗಳ ಅಂತರದಲ್ಲಿ ಕೊಲೆಯಾಗಿರುವ ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಜಿಲ್ ಕೊಲೆ ಪ್ರಕರಣದಲ್ಲಿ ಸರಿಯಾದ ರೀತಿ ತನಿಖೆ ಆಗದಿದ್ದರೆ, ಮೂರು ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಆಗಸ್ಟ್ 5 ರೊಳಗೆ ಬಂಧಿಸದಿದ್ದರೆ ಮರುದಿನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ.
ಇತ್ತೀಚೆಗೆ ಹತ್ಯೆಯಾದ ಈ ಮೂವರು ಯುವಕರ ಮನೆಗಳಿಗೆ ಸೋಮವಾರ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ನಂತರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್ಡಿಕೆ, " ಮೂವರ ಮನೆಗಳಿಗೂ ಹೋಗಿ ಸಾಕಷ್ಟು ಮಾಹಿತಿ ಪಡೆದಿದ್ದೇನೆ. ಅಲ್ಲೇ ಹೆಚ್ಚು ಹೊತ್ತು ಇದ್ದು ನಾನು ಸಾಂತ್ವಾನ ಹೇಳಿದ್ದೇನೆ. ನನ್ನದು ಫ್ಲೈಯಿಂಗ್ ವಿಸಿಟ್ ಅಲ್ಲ" ಎಂದರು.
ಮೂವರನ್ನು ಹತ್ಯೆ ಮಾಡಿದ ಆರೋಪಿಗಳು ಬಂಧಿಸದಿದ್ದರೆ ನಮ್ಮ ಪಕ್ಷದ ಮುಖಂಡರ ಜತೆ ಚರ್ಚೆ ಮಾಡಿ ಮಂಗಳೂರಿಗೆ ಹೊಸ ಬದಕು ನೀಡುವ ಉದ್ದೇಶದಿಂದ ಸತ್ಯಾಗ್ರಹ ಮಾಡುತ್ತೇವೆ. ಮಂಗಳೂರು ನಗರವನ್ನು ಸರ್ವ ಜನಾಂಗದ ಶಾಂತಿ ತೋಟ ಮಾಡಲು ನಾನು ಪ್ರಯತ್ನಸುತ್ತೇನೆ. ಈ ಭಾಗದಲ್ಲಿ ಶಾಂತಿ ನೆಲಸಬೇಕು ಎಂದ ಅವರು ಪ್ರತಿ ಬಡ ಮಕ್ಕಳಿಗೆ ಉದ್ಯೋಗ ಕೊಡುವ ಭರವಸೆ ನೀಡಿದರು.
ಸರ್ಕಾರದಿಂದ ನ್ಯಾಯ ಸಿಗುವ ಬಗ್ಗೆ ಮೃತರ ಮನೆಯವರಿಗೆ ಅನುಮಾನ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಬಂದು ಏನು ಸಾಧಿಸಿದರು. ಎರಡು ಸಮುದಾಯದ ಜನರಿಗೆ ಒಂದು ಒಳ್ಳೆ ಸಂದೇಶ ಕೊಡುತ್ತೀರಿ ಎಂದು ನಾನು ನಿರೀಕ್ಷೆ ಇಟ್ಟಿದ್ದೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಸಿಎಂ ಭೇಟಿ ಮಾಡಿದರು. ಮಸೂದ್ ಮನೆಗೆ ಭೇಟಿ ನೀಡಲಿಲ್ಲ. ಅವತ್ತೇ ಸುರತ್ಕಲ್ ನಲ್ಲೂ ಕೊಲೆಯಾಗಿತ್ತು. ಆದರೆ ನೀವು ಉಳಿದ ಎರಡು ಕಡೆ ಭೇಟಿ ನೀಡಲಿಲ್ಲ. ನನ್ನ ಪ್ರಕಾರ ಪ್ರವೀಣ್ ಹಂತಕರ ಬಗ್ಗೆ ನಿಖರವಾದ ಮಾಹಿತಿ ಇನ್ನು ಸಿಕ್ಕಿಲ್ಲ ಎಂದು ಹೇಳಿದರು.

ಡಿಜಿಪಿ ಆರ್ಎಸ್ಎಸ್ ಸೂಚನೆ ಪಾಲಿಸುತ್ತಾರೆ
ರಾಜ್ಯದ ಡಿಜಿಪಿ ಪ್ರವೀಣ್ ಸೂದ್ ಇಂದು ಬಂದಿದ್ದು ನೋಡಿ ನಾನು ಏನೋ ಮಹಾನ್ ಸಂದೇಶ ಕೊಡಲು ಬಂದಿದ್ದಾರೆಂದು ಅಂದುಕೊಂಡಿದ್ದೆ. ಘಟನೆ ನಡೆದ ದಿನ ಡಿಜಿಪಿ ಇಲ್ಲಿಗೆ ಬರಬೇಕಿತ್ತು. ಬೆಂಗಳೂರಿನಲ್ಲಿ ಅಂತಹ ಘನಂಧಾರಿ ಕೆಲಸ ಏನಿತ್ತು? ವರ್ಗಾವಣೆ ದಂಧೆಯ ಹಣ ಎಣಿಸುವ ಕೆಲಸ ಇತ್ತಾ? ಎಂದು ತೀವ್ರ ವಾಗ್ದಾಳಿ ನಡೆಸಿದರು.
ಇವತ್ತು ಬಂದು ಆ ಮೂರು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುತ್ತಾರೆ ಅಂತಾ ಅಂದುಕೊಂಡಿದ್ದೆ. ನಾನು ಬಂದ ವಿಮಾನದಲ್ಲೇ ಡಿಜಿಪಿ ಅವರು ಬಂದರು. ಆದರೆ ಇವರು ಬಂದು ಸಭೆ ಮಾಡಿ ಹೋಗಿದ್ದಾರೆ. ಆರ್ಎಸ್ಎಸ್ ಸೂಚನೆಯನ್ನು ಪೊಲೀಸ್ ಅಧಿಕಾರಿಗಳಿಗೆ ಹೇಳಲು ಬಂದಿದ್ದಾರೆಂದು ನನಗನ್ನಿಸುತ್ತದೆ. ಡಿಜಿಪಿ ಅವರು ಮುಖ್ಯಮಂತ್ರಿಗಿಂತ ದೊಡ್ಡವರಾ? ಎಂದು ಡಿಜಿಪಿ ವಿರುದ್ಧ ಹರಿಹಾಯ್ದರು.

ಕರುವಿನ ವಿಚಾರಕ್ಕೆ ಕೊಲೆ
ಸಣ್ಣಪುಟ್ಟ ಸಮಾಜಕ್ಕೆ ಸೇರಿದ ಯುವಕರನ್ನು ಹತ್ಯೆ ನಡೆಸುತ್ತೀರಿ. ಮಸೂದ್ ಕುಟುಂಬಕ್ಕೆ ಭೇಟಿ ಕೊಟ್ಟಿದ್ದೆ. ಒಂದು ಕರುವನ್ನು ಯಾರೊ ಒಬ್ಬರು ಸಾಕುವುದಕ್ಕೆ ಕೊಟ್ಟಿದ್ದರು ಎಂದು ಮನೆಯವರು ಹೇಳಿದ್ದಾರೆ. ಮಸೂದ್ ಆ ಕರುವನ್ನು ಮೇಯಿಸಲು ಕರೆದೊಯ್ಯುತ್ತಿದ್ದ. ಕೆಲವು ಯುವಕರು ಈತನನ್ನು ಗುರಾಯಿಸುತ್ತಿದ್ದರು. ಘರ್ಷಣೆ ನಡೆದು ಸಂಧಾನಕ್ಕೆ ಕರೆದಿದ್ದರು. ಆದರೆ ಸಂಧಾನಕ್ಕೆ ಕರೆದವರು ಮಸೂದ್ ಹತ್ಯೆ ಮಾಡಿದ್ದಾರೆ. ಹತ್ಯೆ ನಡೆದ ದಿನವೇ ಕರುವೂ ಸತ್ತು ಹೋಗಿದೆ ಎಂದು ಹೇಳಿದ್ದಾರೆ ಎಂದರು.

ಶಿಕ್ಷಣ ಕಾಶಿಯಲ್ಲಿ ಕೊಲೆಗಳು ತಲೆತಗ್ಗಿಸುವಂತೆ ಮಾಡಿದೆ
ದಕ್ಷಿಣ ಕನ್ನಡವನ್ನು ಕರ್ನಾಟಕದ ಶಿಕ್ಷಣ ಕಾಶಿ ಎನ್ನುತ್ತಾರೆ. ಇದು ಹೀಗೆಯೇ ಉಳಿಯಬೇಕು. ಹಿಂಸೆಯ ನೆರಳು ಬದಿಗೆ ಸರಿಯಬೇಕು ಎಂದ ಕುಮಾರಸ್ವಾಮಿ ಅವರು, ಇಲ್ಲಿನ ವಾತಾವರಣ ಕದಡಲು ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಯೇ ಮುಖ್ಯ ಕಾರಣ. ದೇಶದ ವಿವಿಧ ಮೂಲೆಯಿಂದ ಇಲ್ಲಿ ದೇವರ ದರ್ಶನ ಪಡೆಯಲು ಆಗಮಿಸುತ್ತಾರೆ. ಆದರೆ ಇಲ್ಲಿ ಸರಣಿ ಹತ್ಯೆಗಳು ನೆಡೆಯುತ್ತಿದ್ದು ನಾವು ತಲೆತಗ್ಗಿಸುವಂತೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎರಡು ರಾಷ್ಟ್ರೀಯ ಪಕ್ಷಗಳು ಅವರ ಸ್ವಾರ್ಥದ ರಾಜಕಾರಣಕ್ಕೆ ಜಿಲ್ಲೆಯ ಶಾಂತಿಯನ್ನು ಬಲಿ ಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟೆಲ್ಲಾ ಪ್ರಕರಣ ನಡೆದಿವೆ. ಬಿಜೆಪಿ ಅಥವಾ ಕಾಂಗ್ರೆಸ್ನ ಮಂತ್ರಿಗಳ ಮಕ್ಕಳು ಅಥವಾ ಶಾಸಕರ ಮಕ್ಕಳು ಬಲಿಯಾಗಿದ್ದಾರಾ? ಪ್ರಮುಖ ನಾಯಕರ ಮಕ್ಕಳು ಬಲಿಯಾಗಿದ್ದಾರಾ? ಎಂದು ಪ್ರಶ್ನಿಸಿದರು ಅವರು.

ಕಾಂಗ್ರೆಸ್ ಅಧಿಕಾರದ ವೇಳೆ ಕೊಲೆಗಳಾಗಿವೆ
ಕಾಂಗ್ರೆಸ್ ಸರಕಾರವಿದ್ದಾಗಲೂ ಇಂತಹದ್ದೇ ಘಟನೆ ನಡಿದಿತ್ತು. ಆಗ ಇಲ್ಲಿ ರಮನಾಥ ರೈ ಮತ್ತು ಯು.ಟಿ.ಖಾದರ್ ಉಸ್ತುವಾರಿ ಸಚಿವರಾಗಿದ್ದರು. ಆಗ ನೀವು ಏನು ಮಾಡಿದಿರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧವೂ ವಾಗ್ದಾಳಿ ನಡೆಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದರೂ ಸತ್ತವರ ಮನೆಗೆ ಹೋಗಿಲ್ಲ ಒಂದು ವರ್ಗದ ಜನರನ್ನು ಮಾತ್ರ ಒಲೈಕೆ ಮಾಡುತ್ತಾರೆ. ಮುಸ್ಲಿಂರ ಹತ್ಯೆ ಕೂಡ ಆಗಿದೆ. ಅವರ ಮನೆಯಲ್ಲೂ ಆ ಕುಟುಂಬ ನೋವಿನಲ್ಲಿ ಇದೆ. ಮುಖ್ಯಮಂತ್ರಿಗಳು ಅವರ ಮನೆಗೆ ಹೋಗಿಲ್ಲ. ಪ್ರವೀಣ್ ಮನೆಗೆ ಹೋಗಿ ಹಣ ಕೊಡ್ತಾರೆ ಮುಸ್ಲಿಂ ಕುಟುಂಬದವರಿಗೆ ಒಂದು ರೂಪಾಯಿ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.












Click it and Unblock the Notifications