ಶಿರಾಡಿಯಲ್ಲಿ ಘನ ವಾಹನ ಸಂಚಾರ:ಹಾಸನ ಡಿಸಿ ಜೊತೆ ಚರ್ಚಿಸಿ ನಿರ್ಧಾರ
ಮಂಗಳೂರು, ಸೆಪ್ಟೆಂಬರ್.28: ಶಿರಾಡಿ ಘಾಟ್ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶಿರಾಡಿ ಘಾಟ್ ರಸ್ತೆಯಲ್ಲಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಲು, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಹಾಸನ ಡಿಸಿಯವರೊಂದಿಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಶಿರಾಡಿ ಘಾಟ್ : ಇನ್ನೆರೆಡು ದಿನಗಳಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ
ಘನ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವ್ಯಾಪಕ ಆಗ್ರಹ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ (ಸೆ.27) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗಿತ್ತು.
ಒಂದೆರಡು ದಿನದಲ್ಲಿ ಘಾಟಿಯಲ್ಲಿ ಬಸ್ ಸಹಿತ ಪ್ರಯಾಣಿಕರ ಘನ ವಾಹನಗಳ ಸಂಚಾರ ಆರಂಭಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಸೂಚನೆ ನೀಡಿದ್ದರು.
ಘನ ವಾಹನ ಸಂಚಾರಕ್ಕೆ ಅನುವಾಗುವ ನಿಟ್ಟಿನಲ್ಲಿ ಹಾಸನ ಜಿಲ್ಲಾಧಿಕಾರಿ ಅವರ ಜತೆ ಚರ್ಚಿಸಿ ಪೂರಕ ಕ್ರಮ ಗಳನ್ನು ಕೈಗೊಳ್ಳುವಂತೆ ಸಚಿವರು ತಿಳಿಸಿದ್ದರು.
ಈಗ ಶಿರಾಡಿ ಘಾಟ್ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಸಂಪೂರ್ಣ ವಿವರ
ಆಗಸ್ಟ್ ತಿಂಗಳ ಭಾರೀ ಮಳೆಗೆ ಅಲ್ಲಲ್ಲಿ ಭೂ ಕುಸಿತ ಉಂಟಾದ ಕಾರಣ ಶಿರಾಡಿ ಘಾಟ್ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಲಘು ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ರಸ್ತೆ ಮುಕ್ತ
ರಸ್ತೆ ದುರಸ್ತಿಯ ಬಳಿಕ ಇತ್ತೀಚೆಗೆ ಲಘು ವಾಹನ ಗಳಿಗೆ ಶಿರಾಡಿ ಘಾಟ್ ಮುಕ್ತಗೊಳಿಸಲಾಗಿತ್ತು. ಆ ನಂತರ ಘನ ವಾಹನಗಳಿಗೂ ಶಿರಾಡಿ ಘಾಟ್ ಸಂಚಾರಕ್ಕೆ ಅವಕಾಶಕ್ಕೆ ವ್ಯಾಪಕ ಒತ್ತಾಯ ಕೇಳಿಬಂದಿತ್ತು.