ಜೂನ್ 1ರಿಂದ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ
ಮಂಗಳೂರು, ಏ. 22 : ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯ ಕಾಂಕ್ರಿಟ್ ಕಾಮಗಾರಿ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಜೂನ್ನಲ್ಲಿ ವಾಹನ ಸಂಚಾರವನ್ನು ಆರಂಭಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.
ಮಂಗಳವಾರ ಶಿರಾಡಿ ಘಾಟ್ ಕಾಮಗಾರಿ ವೀಕ್ಷಣೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಹಂತದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಮೊದಲ ಹಂತದ ಕಾಮಗಾರಿ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಜೂನ್ನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು. [ಶಿರಾಡಿ ಘಾಟ್ ಕಾಂಕ್ರಿಟ್ ರಸ್ತೆ ಕಾಮಗಾರಿ ಚಿತ್ರಗಳು]

ಒಟ್ಟು 26 ಕಿ.ಮೀ ಉದ್ದದ ರಸ್ತೆಯನ್ನು 13 ಕಿ.ಮೀ ನಂತೆ ಎರಡು ಭಾಗಗಳನ್ನಾಗಿ ಮಾಡಿಕೊಂಡು ಕಾಂಕ್ರಿಟ್ ರಸ್ತೆಯಾಗಿ ದುರಸ್ತಿ ಮಾಡಲಾಗುತ್ತಿದೆ. ಕೆಂಪುಹೊಳೆ ಚೆಕ್ಪೋಸ್ಟ್ನಿಂದ ಮಾರನಹಳ್ಳಿವರೆಗಿನ 13 ಕಿ.ಮೀ ಉದ್ದದ ರಸ್ತೆಯ ಕಾಮಗಾರಿ ಸದ್ಯ ನಡೆಯುತ್ತಿದೆ ಎಂದು ತಿಳಿಸಿದರು. [ಶಿರಾಡಿ ಬಂದ್ ಪರ್ಯಾಯ ಮಾರ್ಗಗಳು]
ಶುಕ್ರವಾರ ಟೆಂಡರ್ ಪ್ರಕ್ರಿಯೆ : ಶಿರಾಡಿ ಘಾಟ್ ಎರಡನೇ ಹಂತದ ಕಾಮಗಾರಿಯ ಟೆಂಡರ್ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ ಸಚಿವರು, ಈ ಕಾಮಗಾರಿ ನಡೆಯುವ ಪ್ರದೇಶದಲ್ಲಿ ರಸ್ತೆ ಅಗಲವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸಂದರ್ಭ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಮೂರು ಹಂತದಲ್ಲಿ ಕಾಮಗಾರಿ : ಜರ್ಮನಿಯಿಂದ ತರಿಸಲಾಗಿರುವ 'ಸ್ಲಿಪ್ ಫಾರ್ಮ್ ಫೇವರ್' ಎಂಬ ಅತ್ಯಾಧುನಿಕ ಯಂತ್ರದ ಮೂಲಕ ಕಾಮಗಾರಿ ನಡೆಸಲಾಗುತ್ತಿದೆ. ಈ ಯಂತ್ರ 30 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಆದ್ದರಿಂದ ಸಂಜೆ 5ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಕಾಂಕ್ರಿಟ್ ಹಾಕುವ ಕಾಮಗಾರಿ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ನಟರಾಜ್ ವಿವರಣೆ ನೀಡಿದರು.
85 ಕೋಟಿ ವೆಚ್ಚ : ಮೊದಲ ಹಂತದ ಕಾಮಗಾರಿಯನ್ನು 69 ಕೋಟಿ ವೆಚ್ಚದಲ್ಲಿ ಮಾಡಲಾಗುತ್ತಿದೆ. ಗುಲಗಳಲೆಯಿಂದ ಮಾರ್ನಹಳ್ಳಿ ವರೆಗಿನ ದ್ವಿತೀಯ ಹಂತದ ಕಾಮಗಾರಿಗೆ 85 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ ಎಂದರು.












Click it and Unblock the Notifications