ಆಗಸ್ಟ್ 31ಕ್ಕೆ ದಕ್ಷಿಣ ಕನ್ನಡದ ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ
ಮಂಗಳೂರು, ಆಗಸ್ಟ್ 26: ದಕ್ಷಿಣ ಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಆಗಸ್ಟ್ 31ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ನೆರೆ ಹಾವಳಿಗೆ ತತ್ತರಿಸಿರುವ ಜನರಿಗೆ ಸಾಂತ್ವನ ಹೇಳಲು ಮತ್ತು ವಸ್ತುಸ್ಥಿತಿ ಪರಿಶೀಲನೆ ನಡೆಸಲು ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಆಗಸ್ಟ್ 31ರಂದು ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿ, ಮಂಗಳೂರು ಹೊರವಲಯದಲ್ಲಿ ತ್ಯಾಜ್ಯ ಕುಸಿತದಿಂದ ತತ್ತರಿಸಿರುವ ಪಚ್ಚನಾಡಿ ಮಂದಾರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳ್ತಂಗಡಿ ತಾಲೂಕಿಗೆ ಹೋಗಿ ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ" ಎಂದು ತಿಳಿಸಿದರು.
ಮಧ್ಯಾಹ್ನ 3 ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿರುವುದಾಗಿಯೂ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ್ ರೈ, "ರಾಜ್ಯದಲ್ಲಿ ಸಂಭವಿಸಿರುವ ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಈ ಹಿಂದೆ ರಾಜ್ಯದಲ್ಲಿ ಮಳೆ ಹಾನಿಯಾದಾಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಪ್ರಾಕೃತಿಕ ವಿಕೋಪ ಸಂಭವಿಸಿದ ಬೆನ್ನಿಗೆ ಅವರು ರಾಜ್ಯಕ್ಕೆ ಭೇಟಿ ನೀಡಿ ತುರ್ತು ಪರಿಹಾರವನ್ನು ಸ್ಥಳದಲ್ಲೇ ಘೋಷಿಸಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲೇ ಇಲ್ಲ. ಕೇಂದ್ರದ ಸಚಿವರು ವೈಮಾನಿಕ ಸಮೀಕ್ಷೆ ನಡೆಸಿದರೇ ವಿನಃ ಪರಿಹಾರ ಘೋಷಿಸಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications