ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಪೈಪೋಟಿ
ಮಂಗಳೂರು, ಡಿಸೆಂಬರ್ 16: ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಾಳಯದಲ್ಲಿ ಪೈಪೋಟಿ ಆರಂಭವಾಗಿದೆ. ಒಂದೆಡೆ ಮಾಜಿ ಸಚಿವ ರಮಾನಾಥ್ ರೈ ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿ.ಜನಾರ್ದನ ಪೂಜಾರಿ ಭಾರೀ ಮತಗಳ ಅಂತರದಿಂದ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಎದುರು ಪರಾಭವಗೊಂಡಿದ್ದರು.
ಈ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ 1991ರಿಂದ ಅದು ಸಾಧ್ಯವಾಗಿಲ್ಲ. 1977 ರಿಂದ 1989ರ ವರೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಜನಾರ್ದನ ಪೂಜಾರಿ ಸತತವಾಗಿ ಜಯಗಳಿಸಿ ಕಾಂಗ್ರೆಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭದ್ರ ಬುನಾದಿ ಹಾಕಿದ್ದರು.
1991ರ ಬಳಿಕ ಹಿಂದುತ್ವದ ಅಲೆ ಜಿಲ್ಲೆಯಲ್ಲಿ ಬೀಸಿದ ಪರಿಣಾಮ ಚಿತ್ರಣವೇ ಬದಲಾಯಿತು. 1991 ರ ಬಳಿಕ ಈ ಕ್ಷೇತ್ರ ಬಿಜೆಪಿ ವಶವಾಯಿತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತವಾಗಿ ಸೋಲುತ್ತಿದೆ. ಈ ಕ್ಷೇತ್ರದಿಂದ ಮತ್ತೆ ಜನಾರ್ದನ ಪೂಜಾರಿ ಸ್ಪರ್ಧಿಸುವುದು ಅನುಮಾನ ಎಂದೇ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹಲವು ಮುಖಂಡರು ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಈ ನಡುವೆ ಜನಾರ್ಧನ ಪೂಜಾರಿ ಮತ್ತೇ ಮುಂದಿನ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.

ಭಾರೀ ಪೈಪೋಟಿ
ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಮುಖಡರು ಭಾರೀ ಪೈಪೋಟಿ ಆರಂಭಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಅವಕಾಶ ನೀಡಿದರೆ ಸ್ಪರ್ಧೆಗೆ ಸಿದ್ಧ ಎಂದು ಐವನ್ ಡಿಸೋಜ ಹೇಳಿದ್ದಾರೆ. "ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದೇನೆ. ಸ್ಪರ್ಧೆಗೆ ಅವಕಾಶ ನೀಡುವಂತೆ ಹೈಕಮಾಂಡ್ ಗೆ ಕೇಳಿದ್ದು ಟಿಕೆಟ್ ಸಿಕ್ಕರೆ ಸ್ಪರ್ಧಿಸಿ ಗೆಲ್ಲತ್ತೇನೆ" ಎಂದು ಹೇಳಿದ್ದಾರೆ.

ಲೋಬೋ ಸಮರ್ಥ ನಾಯಕ
ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ ಆರ್ ಲೋಬೋ ಕೂಡ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್ ಗಾಗಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ನಿವೃತ್ತ ಕೆಎಎಸ್ ಅಧಿಕಾರಿಯಾಗಿರುವ ಜೆ ಆರ್ ಲೋಬೋ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದವರು. ಆಡಳಿತಾತ್ಮಕ ಅನುಭಾವ ಹೊಂದಿದ್ದಾರೆ. ಸಂಸತ್ ನಲ್ಲಿ ಧ್ವನಿ ಎತ್ತುವ ಸಾಮರ್ಥ್ಯ ಲೋಬೋ ಅವರಿಗೆ ಇದೆ. ಈ ಹಿನ್ನೆಲೆಯಲ್ಲಿ ಲೋಬೋ ಲೋಕಸಭೆಗೆ ಸ್ಪರ್ಧಿಸಲು ಸಮರ್ಥರು ಎಂಬ ಆಭಿಪ್ರಾಯ ಕೂಡ ವ್ಯಕ್ತವಾಗಿದೆ.

ಟಿಕೆಟ್ ರೇಸ್ ನಲ್ಲಿ ಮಿಥುನ್ ರೈ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ವಂಚಿತ ಯುವ ಮುಖಂಡ ಮಿಥುನ್ ರೈ ಕೂಡ ಟಿಕೆಟ್ ರೇಸ್ ನಲ್ಲಿದ್ದಾರೆ. ಪ್ರಭಾವಿ ಸಚಿವ ಡಿ ಕೆ ಶಿವಕುಮಾರ್ ಆಪ್ತ ಮಿಥುನ್ ರೈ ಲೋಕಸಭಾ ಟಿಕೆಟ್ ಗೆ ಲಾಬಿ ಆರಂಭಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮಿಥುನ್ ತಯಾರಿ ನಡೆಸುತ್ತಿದ್ದಾರೆ.

ಕುತೂಹಲ ಮೂಡಿಸಿವೆ
ಒಟ್ಟಿನಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.












Click it and Unblock the Notifications