ಬೋಳಂಗಡಿಯಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿನ ಮೇಲೆ ಕಲ್ಲು ತೂರಾಟ
ಮಂಗಳೂರು, ಸೆಪ್ಟೆಂಬರ್ 10: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಇಂದು ಸೋಮವಾರ ಕರೆ ನೀಡಿರುವ ಭಾರತ್ ಬಂದ್ ಗೆ ದಕ್ಷಿಣ ಕ್ನನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಮುಂಜಾನೆಯಿಂದಲೇ ಖಾಸಗಿ ಹಾಗು ಸರಕಾರಿ ಬಸ್ ಗಳು ರಸ್ತೆಗಿಳಿದಿಲ್ಲ.
ಆದರೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಭಾಗಶಃ ತೆರೆದಿದ್ದು ವ್ಯಾಪಾರ ಮುಂದುವರೆಸಿವೆ. ಆದರೆ ಕೆಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಬಲವಂತದಿಂದ ಅಂಗಡಿಗಳನ್ನು ಮುಚ್ಚಿಸಲು ಯತ್ನಿಸಿದ್ದಾರೆ.
ಬಂದ್ ಸಂದರ್ಭ ಬಳಸಿ ಕೆಲ ದುಷ್ಕರ್ಮಿಗಳು ಬಸ್, ಹೋಟೆಲ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ನಡುವೆ ಬಂಟ್ವಾಳದ ಶಾಸಕ ರಾಜೇಶ್ ನಾಯಕ್ ಕಾರಿಗೆ ದುಷ್ಕರ್ಮಿಗಳಿಂದ ಕಲ್ಲೆಸದ ಘಟನೆಯೂ ನಡೆದಿದೆ.

ಬಂದ್ ನೆಪದಲ್ಲಿ ಪ್ರತಿಭಟನಾ ಜಾಥಾ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರಿನ ಮೇಲೆ ಕಲ್ಲೆಸೆದು ಹಾನಿಗೈದ ಪ್ರಕರಣ ಈಗ ರಾಜಕೀಯ ಬಣ್ಣ ಪಡೆದುಕೊಂಡಿದೆ. ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಬಂಟ್ವಾಳ ನಗರ ಠಾಣೆ ಮುಂದೆ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಅಲ್ಲದೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಾಜೇಶ್ ನಾಯಕ್ ಪೊಲೀಸ್ ದೂರು ನೀಡಿದ್ದಾರೆ. ಇದೇ ವೇಳೆ ಉದ್ರಿಕ್ತ ಬಿಜೆಪಿ ಕಾರ್ಯಕರ್ತರು ನಾಳೆ ಬಂಟ್ವಾಳ ತಾಲೂಕು ಬಂದ್ ಕರೆ ನೀಡಲು ಮುಂದಾಗಿದ್ದರು.
ಆದರೆ, ಶಾಸಕರು ಮತ್ತು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಸೇರಿ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಶಾಸಕರ ಕಾರಿನ ಮೇಲೆ ಕಲ್ಲು ತೂರಿದ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

ಬಂದ್ ವಿಚಾರದಲ್ಲಿ ದುಷ್ಕರ್ಮಿಗಳ ಕೃತ್ಯ ಈಗ ಬಂಟ್ವಾಳದಲ್ಲಿ ರಾಜಕೀಯ ವೈಷಮ್ಯಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕಲ್ಲಡ್ಕ ಬಳಿಯ ಬೋಳಂಗಡಿ ಎಂಬಲ್ಲಿ ಶಾಸಕ ರಾಜೇಶ್ ನಾಯಕ್ ಬರುತ್ತಿದ್ದ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಿದ್ದರು.












Click it and Unblock the Notifications