ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯಾ ತಡೆಗೆ ನೂತನ ಕೋರ್ಸ್
ಮಂಗಳೂರು, ಅಕ್ಟೋಬರ್. 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯಾ ಸರಣಿ ಮುಂದುವರೆದಿದೆ. ಇದು ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನು ಕಂಗೆಡೆಸಿದೆ. ಶಿಕ್ಷಣ ಕಾಶಿ ಎಂದೇ ಗುರುತಿಸಲಾಗುವ ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ದೇಶದ ಇತರ ಭಾಗಗಳಿಂದ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಬರುತ್ತಾರೆ.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯಾ ಪ್ರಕರಣಗಳು ವಿದ್ಯಾರ್ಥಿಗಳ ಪೋಷಕರನ್ನು ಕಂಗೆಡಿಸಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ ಜಿಲ್ಲೆಯಲ್ಲಿ 5 ಮಂದಿ ವಿದ್ಯಾರ್ಥಿಗಳು ಅತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಮಂಗಳೂರಿನ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿಗಳ ಆತ್ಮಹತ್ಯಾ ತಡೆಗೆ ವಿಭಿನ್ನ ಕೋರ್ಸ್ ಆರಂಭಿಸಲು ಮುಂದಾಗಿದೆ.

ನೂತನ ಕೋರ್ಸ್ ಆರಂಭಿಸಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳಿಗೆ ಬ್ರೇಕ್ ಹಾಕುವ ಉದ್ದೇಶ ಈ ಕಾಲೇಜು ಹೊಂದಿದ್ದು, ಸರ್ಕಾರಕ್ಕೆ ಈ ಕೋರ್ಸ್ ಕುರಿತ ಪ್ರಸ್ತಾವನೆ ಸಲ್ಲಿಸಿರೋ ಶಿಕ್ಷಣ ಸಂಸ್ಥೆ ಅನುಮತಿಗಾಗಿ ಕಾಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಬಹುತೇಕ ಈ ಆತ್ಮಹತ್ಯೆ ಪ್ರಕರಣಗಳಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಶಿಸ್ತು ಕ್ರಮ ಹಾಗು ಹಾಸ್ಟೆಲ್ ವಾರ್ಡನ್ ಗಳ ವಿರುದ್ಧವೇ ಗಂಭೀರ ಆರೋಪಗಳು ಕೇಳಿ ಬರತೊಡಗಿದೆ. ಅದಲ್ಲದೇ ಶೈಕ್ಷಣಿಕ ಚಟುವಟಿಕೆಗಳ ಒತ್ತಡ , ಉತ್ತಮ ಆಂಕಗಳ ನಿರೀಕ್ಷೆ ಗಳು ಆತ್ಮಹತ್ಯೆಗಳಿಗೆ ಕಾರಣ ಎಂಬ ಅಂಶ ಬಯಲಾಗಿದೆ.
ವಿದ್ಯಾರ್ಥಿಗಳ ಆತ್ಮಹತ್ಯಾ ಪ್ರಕರಣ ತಡೆಯುವ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಿದ ಮಂಗಳೂರಿನ ಪ್ರತಿಷ್ಠಿತ ವಿಕಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ ಮ್ಯಾನೇಜ್ ಮೆಂಟ್ ಕೋರ್ಸ್ ಆರಂಭಿಸಲು ಮುಂದಾಗಿದೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಹಾಗು ವಿಕಾಸ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ.ಪಾಲೆಮಾರ್ ಈ ರೀತಿಯ ಕೋರ್ಸ್ ರಾಷ್ಟ್ರಮಟ್ಟದಲ್ಲಿಯೇ ಪ್ರಥಮ ಬಾರಿಗೆ ಪರಿಚಯಿಸಲಾಗುತ್ತಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಹಾಸ್ಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಿಭಾಗದ ನೌಕರರಿಗೆ ಸೂಕ್ತವಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕೋರ್ಸ್ ಆರಂಭಿಸಲು ತೀರ್ಮಾನಿಸಲಾಗಿದೆ.
ಮನೆಯಿಂದ ದೂರ ಇರುವ ವಿದ್ಯಾರ್ಥಿಗಳಿಗೆ ಪೋಷಕರ ಸ್ಥಾನವನ್ನು ತುಂಬೋ ಜವಾಬ್ದಾರಿ ಹಾಸ್ಟೆಲ್ ವಾರ್ಡನ್ ಗಳದ್ದು. ಅವರಿಗೆ ಸೂಕ್ತ ಶಿಕ್ಷಣ ಹಾಗೂ ತರಬೇತಿ ನೀಡುವ ಮೂಲಕ ಆತ್ಮಹತ್ಯೆಗಳನ್ನು ತಡೆಯೋ ಉದ್ದೇಶ ಕಾಲೇಜಿನವರದ್ದು ಎಂದು ತಿಳಿಸಿದರು.












Click it and Unblock the Notifications