ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟನೆ ಮತ್ತೆ ಮುಂದೂಡಿಕೆ
ಮಂಗಳೂರು, ಜೂನ್ 10 : ಮಂಗಳೂರು ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟನೆಯ ದಿನಾಂಕವನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಹಿಂದಿನ ವೇಳಾಪಟ್ಟಿ ಪ್ರಕಾರ ಇಂದು ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟನೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಉದ್ಘಾಟನಾ ದಿನಾಂಕವನ್ನು ಮುಂದೂಡಲಾಗಿದೆ.
ಜೂನ್ 14ರಂದು ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಸಭೆ ನಡೆಯಲಿದ್ದು ಸಭೆಯ ಬಳಿಕ ಉದ್ಘಾಟನೆಯ ದಿನಾಂಕ ನಿಗದಿ ಪಡಿಸುವುದಾಗಿ ತಿಳಿದುಬಂದಿದೆ.
'ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ವಿಳಂಬಕ್ಕೆ ರಾಜ್ಯ ಸರಕಾರ ಹೊಣೆ'
ಎಂಟು ವರ್ಷಗಳ ಹಿಂದೆ ಆರಂಭಗೊಂಡಿದ್ದ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಅಮೆಗತಿಯಲ್ಲಿ ಸಾಗಿತ್ತು. ತೊಕ್ಕೊಟ್ಟು ಮೇಲ್ಸೇತುವೆ ಹಾಗು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬ ವಿಚಾರ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಮಗಾರಿಯ ವಿಳಂಬಕ್ಕೆ ಕಾರಣ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನೆ ಹಿಡಿದು ಕಾಂಗ್ರೆಸ್ ಹಾಗು ಜೆಡಿಎಸ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು.
ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ನಡೆಸುವ ಸಂಸ್ಥೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಪೂರ್ಣ ಗೊಂಡಿದ್ದು ಉದ್ಘಾಟನೆಗೆ ದಿನಾಂಕ ನಿಗದಿಯಾಗಬೇಕಿದೆ.
ಮೂರು ತಿಂಗಳಲ್ಲಿ 24 ಗಂಟೆಗಳ ಕಾಲ ನಿರಂತರ ಕಾಮಗಾರಿ ನಡೆದಿದ್ದು, ಕಾಮಗಾರಿಗೆ ಮಳೆ ಅಡಚಣೆ ನೀಡದ ಕಾರಣ ಸದ್ಯ ಕಾಮಗಾರಿ ಪೂರ್ಣಗೊಂಡಿದೆ. ತಡೆಗೋಡೆಗೆ ಪೇಂಟಿಂಗ್ ಕಾರ್ಯ ಮತ್ತು ಲೈನ್ ಹಾಕುವ ಕಾರ್ಯ ನಿನ್ನೆ ಸಂಜೆಗೆ ಪೂರ್ಣಗೊಂಡಿದೆ.