ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್
ಮಂಗಳೂರು, ಮಾರ್ಚ್ 14; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸದಲ್ಲಿದ್ದಾರೆ. ಮಂಗಳೂರಿಗೆ ಆಗಮಿಸಿದ ಅವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥನ ದರ್ಶನ ಮಾಡಿದರು.
ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಅಧಿಕಾರಿಗಳು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.
ಬಜ್ಪೆ ವಿಮಾನ ನಿಲ್ದಾಣದಿಂದ ನೇರ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ರಾಜ್ಯಪಾಲರು ಗೋಕರ್ಣನಾಥ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ರಾಜ್ಯಪಾಲರಿಗೆ ಶಾಲು, ಫಲಪುಷ್ಪ, ದೇವರ ವಿಗ್ರಹ ನೀಡಿ ವಿಶೇಷ ಗೌರವ ಸಲ್ಲಿಸಲಾಯಿತು.
ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದವರ ದಾಖಲೆ ಪುಸ್ತಕದಲ್ಲಿ ರಾಜ್ಯಪಾಲರು ಹೆಸರು ಸಹಿಯನ್ನು ದಾಖಲಿಸಿದರು. ಬಳಿಕ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಆತ್ಮಕಥೆಯ ಇಂಗ್ಲಿಷ್ ಅನುವಾದ ಪುಸ್ತಕವನ್ನು ನೀಡಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಹಿನ್ನಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಮಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಮೂಡಬಿದರೆಯ ಸಾವಿರ ಕಂಬದ ಬಸದಿ, ಜೈನ ಬಸದಿಗೆ ರಾಜ್ಯಪಾಲರು ಭೇಟಿ ನೀಡಲಿದ್ದಾರೆ. ಬಳಿಕ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.
ರಾಜ್ಯಪಾಲರ ಆಗಮನ ಹಿನ್ನಲೆಯಲ್ಲಿ ಇಡೀ ಮಂಗಳೂರು ನಗರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾರ್ಕಳ ಉತ್ಸವ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದು, ಭದ್ರತಾ ದೃಷ್ಟಿಯಿಂದ ಪಾಸ್ ಇಲ್ಲದವರಿಗೆ ಸರ್ಕ್ಯೂಟ್ ಹೌಸ್ಗೆ ಪ್ರವೇಶ ನಿಷೇಧಿಸಲಾಗಿದೆ.