'ಮಂಗಳೂರು ಚಲೋ' ಬಿಜೆಪಿ ರ್ಯಾಲಿಗೆ ಪೊಲೀಸರಿಂದ ಅನುಮತಿ ನಿರಾಕರಣೆ
ಮಂಗಳೂರು, ಸೆಪ್ಟೆಂಬರ್ 04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ ಸೆಪ್ಟೆಂಬರ್ 07 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆಸಲು ಉದ್ದೇಶಿಸಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಭೆ ನಡೆಸುವುದಕ್ಕೂ ಅನುಮತಿ ಇಲ್ಲ ಎಂದು ತಿಳಸಿದ್ದಾರೆ.
ಮಂಗಳೂರು ಚಲೋಗೆ ಅನುಮತಿ ನಿರಾಕರಿಸಿರುವ ಕುರಿತು ಬಿಜೆಪಿ ಯುವ ಮೋರ್ಚಾ ಮುಖಂಡರಿಗೆ ಅಧಿಕೃತವಾಗಿ ಮಾಹಿತಿ ರವಾನಿಸಲಾಗಿದೆ' ಎಂದು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದಾರೆ.
ಈ ಮಂಗಳೂರು ಚಲೋ ಸಮಾವೇಶಕ್ಕೆ ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಸೆಪ್ಟೆಂಬರ್ 5 ಹಾಗೂ 6 ರಂದು ಹೊರಡಲಿದ್ದು, ಸೆಪ್ಟೆಂಬರ್ 7 ರಂದು ಮಂಗಳೂರು ತಲುಪಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ನಿರ್ಧರಿಸಿತ್ತು.
ಮಂಗಳೂರು ಚಲೋ ಪ್ರತಿಭಟನಾ ಬೈಕ್ ರ್ಯಾಲಿಗೆ ಪೋಲಿಸರು ನಿರ್ಬಂಧ ಹೇರಿರುವುದಕ್ಕೆ ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸದ ನಳೀನ್ ಕುಮಾರ್ ಕಟೀಲ್ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ಈ ಬೈಕ್ ಜಾಥಾ ವನ್ನು ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದಿದ್ದಾರೆ.
ಬೈಕ್ ಜಾಥಾಕ್ಕೆ ಈಗಾಗಲೇ 10,000ಕ್ಕೂ ಅಧಿಕ ಕಾರ್ಯಕರ್ತರು ನೋಂದಣಿ ಮಾಡಿಕೊಂಡಿದ್ದು, ಈಗಾಗಲೇ ಸಿದ್ದತೆಗಳು ಪೂರ್ಣಗೊಂಡಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಬೈಕ್ ಜಾಥಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬೈಕ್ ಜಾಥಾವನ್ನು ರಾಜ್ಯ ಸರಕಾರ ತಡೆಯಲಿ ಎಂದು ಸವಾಲು ಹಾಕಿದ್ದಾರೆ.
ಒಂದು ವೇಳೆ ರಾಜ್ಯ ಸರ್ಕಾರ ಪೋಲಿಸ್ ಇಲಾಖೆ ಮೂಲಕ ಬಲ ಪ್ರಯೋಗ ಮಾಡಿ ಜಾಥಾವನ್ನು ಹತ್ತಿಕ್ಕಲು ನೋಡಿದರೆ ನಡೆಯುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.












Click it and Unblock the Notifications