'ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ಭಾರತ ವಿಶ್ವಕ್ಕೆ ಗುರುವಾಗಲಿದೆ'
ಮಂಗಳೂರು, ಏಪ್ರಿಲ್ 09:ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತವನ್ನು ಬಲಿಷ್ಠ ದೇಶವಾಗಿಸಲು ಹಗಲಿರುಳು ಶ್ರಮಿಸುತ್ತಿರುವ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮತ್ತೊಮ್ಮೆ ಪ್ರಚಂಡ ಬಹುಮತದ ಸರ್ಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಗರದ ಚಿಲಿಂಬಿಗುಡ್ಡೆಯ ಶ್ರೀ ರಾಮಾಂಜನೇಯ ಯುವಕ ಮಂಡಲದ ಸಭಾಂಗಣದಲ್ಲಿ ಮಂಗಳವಾರ ನಡೆದ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 1996ನೇ ಇಸವಿಯಿಂದ ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದೆ. ಹಾಲಿ ಸಂಸದ ಹಾಗೂ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ. ದ.ಕ.ಜಿಲ್ಲೆಗೆ ನಳಿನ್ ಕುಮಾರ್ ಅವರು ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದು ಪ್ರಶಂಸಿಸಿದರು.
ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದ.ಕ.ಜಿಲ್ಲೆಯಿಂದ ದೊಡ್ಡ ಮಟ್ಟಿನ ಅಪೇಕ್ಷೆ ಇಡಲಾಗಿದೆ. ಜನಸಾಮಾನ್ಯರಿಂದ ಹಿಡಿದು ಸೈನಿಕರವರೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ ಏಕೈಕ ಪ್ರಧಾನಿ ಮೋದಿ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾದರೆ ಈ ಜಿಲ್ಲೆಯ ಜನತೆ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರನೇ ಬಾರಿಗೆ ಗೆಲ್ಲಿಸಿ ಸಂಸತ್ಗೆ ಕಳಿಸ ಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಮಾತನಾಡಿ, ಪ್ರಧಾನಿ ಮೋದಿಯವರು ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಸಂಕಲ್ಪತೊಟ್ಟಿದ್ದಾರೆ. ಜೊತೆಗೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹ ಮಾಡುವಲ್ಲಿಯೂ ಸತತ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ದೇಶದ ಪ್ರತಿಯೊಬ್ಬ ವ್ಯಕ್ತಿ ಕೂಡಾ ಚೌಕಿದಾರನಾಗಿ, ಭಾರತವನ್ನು ಯಶಸ್ವಿಯಾಗಿ ಮುನ್ನಡೆಸಬೇಕು. ಅದರ ಮೂಲಕ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ರಾಮಚಂದ್ರ ಬೈಕಂಪಾಡಿ, ಜನಾರ್ಧನ ಕುಡ್ವ, ರಮೇಶ್ ಕಂಡೆಟ್ಟು, ಉಮಾನಾಥ ಅಮಿನ್, ವಾಸುದೇವ್, ಗುರು ಪ್ರಸಾದ್, ಉಮೇಶ್ ಶೆಟ್ಟಿ, ಸಚಿನ್ ರಾಜ್ಗೋಪಾಲ್ ರೈ, ಸಂತೋಷ್ ಉಳ್ಳಾಲ್, ಪಕ್ಷದ ಸ್ಥಳೀಯ ಮುಖಂಡರಾದ ಗುರುದತ್, ಸುನಂದ, ಸುರೇಖ ಹೆಗ್ಡೆ, ಚಂದ್ರಾವತಿ, ಲೋಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications