ಬಾಲಕಿ ಮೇಲೆ ದೌರ್ಜನ್ಯ; 3 ಪೊಲೀಸರ ಅಮಾನತು
ಮಂಗಳೂರು, ಜುಲೈ 1: ಪುತ್ತೂರಿನ ಸಂಪ್ಯಾದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪ್ಯಾ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಿ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ತೆರಳಿ ಸಂತ್ರಸ್ತೆಯನ್ನು ಭೇಟಿ ಮಾಡಿ ವಿಚಾರಣೆ ನಡೆಸಿದ ಎಸ್ ಪಿ ಲಕ್ಷ್ಮೀಪ್ರಸಾದ್, ಸಂಪ್ಯಾ ಗ್ರಾಮಾಂತರ ಠಾಣೆ ಪೊಲೀಸ್ ಸಿಬ್ಬಂದಿ ದಿನೇಶ್, ಆಶಾ ಮತ್ತು ಜ್ಯೋತಿ ಅವರನ್ನು ಅಮಾನತ್ತಿನಲ್ಲಿಟ್ಟು ಪ್ರಕರಣದ ಕುರಿತು ಹಿರಿಯ ಅಧಿಕಾರಿಯಿಂದ ತನಿಖೆಗೆ ಆದೇಶಿಸಿದ್ದಾರೆ.
ಯುವತಿಗೆ ಚೂರಿ ಇರಿತ ಪ್ರಕರಣ; ಚಿಕಿತ್ಸೆಗೆ ಸ್ಪಂದಿಸುತ್ತಿರುವ ದೀಕ್ಷಾ
ಚಿನ್ನದ ಸರ ಕದ್ದಿದ್ದಾರೆ ಎನ್ನುವ ಆರೋಪದಲ್ಲಿ ಬಡ ಕುಟುಂಬವೊಂದನ್ನು ಪೊಲೀಸ್ ಠಾಣೆಗೆ ಕರೆಸಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಅಪ್ರಾಪ್ತ ಬಾಲಕಿ ಮೇಲೆ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲ್ಲೆ ನಡೆಸಿದ್ದು, ಬಾಲಕಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೌಡಿಚಾರ್ ನ ಮುಮ್ತಾಜ್ ಎಂಬುವರ ಮನೆಯಿಂದ ಚಿನ್ನದ ಹಾರ ಕಳುವಾಗಿದ್ದು, ಸಂತ್ರಸ್ತ ಬಾಲಕಿಯೇ ಈ ಸರ ಕದ್ದಿದ್ದಾಳೆ ಎಂದು ಸಂಪ್ಯಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ದೂರಿನ ಹಿನ್ನೆಲೆಯಲ್ಲಿ ಸಂಪ್ಯಾ ಪೊಲೀಸರು ಬಾಲಕಿ ಹಾಗೂ ಆಕೆಯ ಪೋಷಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ಸಂದರ್ಭ ಪೊಲೀಸರು ಪೋಷಕರು ಸೇರಿದಂತೆ ಅಪ್ರಾಪ್ತ ಬಾಲಕಿ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಬಾಲಕಿಗೆ ಚಿನ್ನ ಕದ್ದಿರುವುದಾಗಿ ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಡ ಹೇರಿದ್ದು, ಲಾಠಿಯಿಂದ ಹಲ್ಲೆ ನಡೆಸಿದ್ದಾರಲ್ಲದೆ, ವಿದ್ಯುತ್ ಶಾಕ್ ಕೂಡ ನೀಡಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಳು.
ಮಂಗಳೂರಿನಲ್ಲಿ ಯುವತಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಈ ನಡುವೆ ಪುತ್ತೂರಿನ ಸಂಪ್ಯಾ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ವಿಚಾರಿಸಲು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಆಸ್ಪತ್ರೆ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಬಾಲಕಿ ಕುರಿತು ವಿಚಾರಿಸಲು ಆಸ್ಪತ್ರೆಗೆ ಬಂದಿದ್ದ ಅವರು, ವೈದ್ಯರು ಬರುವುದು ತಡವಾದುದಕ್ಕೆ ಸಿಡಿಮಿಡಿಗೊಂಡರು. ಜನಪ್ರತಿನಿಧಿಯಾದ ನನಗೇ ಇಷ್ಟೊಂದು ಬೇಜವಾಬ್ದಾರಿಯಿಂದ ವರ್ತಿಸುವ ನೀವು ಜನಸಾಮಾನ್ಯರಲ್ಲಿ ಯಾವ ರೀತಿ ವರ್ತಿಸಬಹುದು ಎಂದು ತರಾಟೆಗೆ ತೆಗೆದುಕೊಂಡರು.
ಬಂಟ್ವಾಳದ ಪ್ರೇಮಸಲ್ಲಾಪದ ವೈರಲ್ ವಿಡಿಯೋ ಹಿಂದಿತ್ತು ಹನಿಟ್ರ್ಯಾಪ್ ಜಾಲ
ಅಧ್ಯಕ್ಷರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಬೇರೆ ರೋಗಿಯನ್ನು ಪರೀಕ್ಷೆ ಮಾಡುತ್ತಿದ್ದೆ ಎಂದು ವೈದ್ಯರು ಸಮಜಾಯಿಷಿ ನೀಡಿದರೂ ಇದ್ಯಾವುದನ್ನೂ ತಲೆಗೆ ಹಾಕಿಕೊಳ್ಳದೆ, ತನ್ನನ್ನು ಅರ್ಧ ಗಂಟೆ ಕಾಯಿಸಿದ ವೈದ್ಯರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಎಚ್ಚರಿಕೆಯನ್ನೂ ನೀಡಿದರು.