ಮತ ಎಣಿಕೆಗೆ ದ. ಕನ್ನಡದಲ್ಲಿ ಬಿಗಿ ಭದ್ರತೆ, ವಿಜಯೋತ್ಸವಕ್ಕೆ ನಿಷೇಧ
ಮಂಗಳೂರು, ಮೇ 14: ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 58 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರು ಹೊರವಲಯದ ಮಹಾತ್ಮಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆ ಹಾಗು ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ.
ಮತ ಎಣಿಕೆ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಎರಡು ದಿನಗಳ ನಿಷೇಧಾಜ್ಞೆ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಮತ ಎಣಿಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ , ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಭಂಗಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ಮದ್ಯರಾತ್ರಿಯಿಂದ ಮೇ 16 ರಾತ್ರಿ 12 ಗಂಟೆವರೆಗೆ ವಿಜಯೋತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ ಅವರು ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಹೇಳಿದರು.

ಮೇ 14 ರ ಮಧ್ಯರಾತ್ರಿಯಿಂದ 16 ರ ಮಧ್ಯರಾತ್ರಿವರೆಗೆ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ ಪಿಸಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಈ ವೇಳೆ ಮದ್ಯಮಾರಾಟ ನಿಷೇಧ ಮಾಡಲಾಗಿದೆ ಎಂದು ಅವರು ಹೇಳಿದರು.
ಮತ ಎಣಿಕೆಯಲ್ಲಿ ಯಾವುದೇ ಗೊಂದಲವಾಗದಂತೆ ಎಚ್ಚರ ವಹಿಸಲಾಗಿದ್ದು, ಮತಯಂತ್ರಗಳನ್ನು ಇಟ್ಟಿರುವ ಸ್ಟ್ರಾಂಗ್ ರೂಂಗಳಿಗೆ ಮೂರು ಹಂತದ ಭದ್ರತೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications