ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಪೊಲೀಸ್ ಸರ್ಪಗಾವಲು
ಮಂಗಳೂರು, ಅಕ್ಟೋಬರ್ 26: ಪ್ರಧಾನಿ ನರೇಂದ್ರ ಮೋದಿ ಬೆಳ್ತಂಗಡಿಯ ಉಜಿರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.
ಜಿಲ್ಲೆಯ ಎಲ್ಲಾ ಆಯಕಟ್ಟಿನ ಸ್ಥಳಗಳು ಸೇರಿದಂತೆ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ
In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ
ಪ್ರಧಾನಿ ಅವರ ಭದ್ರತೆಯ ಜವಾಬ್ದಾರಿ ಹೊತ್ತಿರುವ ಎಸ್.ಪಿ.ಜಿ ಪಡೆಯ ಐಜಿ ಶ್ರೇಣಿಯ ಅಧಿಕಾರಿ ಸೇರಿದಂತೆ ಎಸ್.ಪಿ.ಜಿ ಪಡೆಯ ಕಮಾಂಡೋಗಳು ಈಗಾಗಲೇ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.
ಕಮಾಂಡೋಗಳು ಮತ್ತು ಐಜಿ ಶ್ರೇಣಿಯ ಅಧಿಕಾರಿ ಪ್ರಧಾನಿ ಭೇಟಿ ನೀಡುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಬಹಿರಂಗ ಸಭೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧರ್ಮಸ್ಥಳದಲ್ಲಿ ಅಲೋಕ್ ಮೋಹನ್
ಈ ನಡುವೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್ ಅವರು ಆಗಮಿಸಿದ್ದು ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ .

ನಕ್ಸಲ್ ನಿಗ್ರಹ ದಳದಿಂದ ಕೂಬಿಂಗ್
ನಕ್ಸಲ್ ನಿಗ್ರಹ ದಳ ಈಗಾಗಲೇ ಧರ್ಮಸ್ಥಳ ಆಸುಪಾಸಿನ ಅರಣ್ಯ ಪ್ರದೇಶ ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.

ಭದ್ರತಾ ಉಸ್ತುವಾರಿಗೆ 2000 ಪೊಲೀಸ್
ಅಕ್ಟೋಬರ್ 29 ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನೆಲೆಯಲ್ಲಿ 10 ಎಸ್.ಪಿ ಶ್ರೇಣಿಯ ಅಧಿಕಾರಿಗಳು, 150 ಪಿಎಸ್ಐ, ಡಿಎಸ್ಪಿ ಶ್ರೇಣಿ ಅಧಿಕಾರಿಗಳು ಸೇರಿದಂತೆ 2000 ಪೊಲೀಸ್ ಸಿಬ್ಬಂದಿ ಗಳನ್ನು ಬಂದೋಬಸ್ತಿಗೆ ನಿಯೋಜಿಸಲಾಗಿದೆ.

ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸಿಬ್ಬಂದಿ ಸಾಥ್
ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸಿಬ್ಬಂದಿಗಳು ಈಗಾಗಲೇ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದು ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಆಗಮನಕ್ಕೆ ಧರ್ಮಸ್ಥಳ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ.












Click it and Unblock the Notifications