ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆಗೆ ಗ್ರೂಪ್ ಅಡ್ಮಿನ್ ಗಳೇ ಹೊಣೆ!
ಟಿಪ್ಪು ಜಯಂತಿಯಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ನ.9ರಿಂದ ನ.12ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಮಂಗಳೂರು, ನವೆಂಬರ್. 09 : ಟಿಪ್ಪು ಜಯಂತಿಯಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಈ ನಿಟ್ಟಿನಲ್ಲಿ ನವೆಂಬರ್ 9(ಬುಧವಾರ) ಬೆಳಗ್ಗೆ 6 ಗಂಟೆಯಿಂದ ನ. 12ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆಗೆ ಶಿಷ್ಟಾಚಾರದಂತೆ ಎಲ್ಲ ಗಣ್ಯರನ್ನು ಆಹ್ವಾನಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಜಾತ್ಯತೀತ ವ್ಯಕ್ತಿಯಿಂದ ಟಿಪ್ಪು ಕುರಿತು ಉಪನ್ಯಾಸ ನಡೆಯಲಿದೆ.[ಟಿಪ್ಪು ಒಬ್ಬ ಆಕ್ರಮಣಕಾರಿ, ಅತ್ಯಾಚಾರಿ, ಮತಾಂತರಿ: ಕಟೀಲ್]
ನಿಷೇಧಾಜ್ಞೆ ಸಂದರ್ಭದಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪುಗೂಡಲು, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ ಸಮಾರಂಭ ನಡೆಸಲು ಅವಕಾಶವಿಲ್ಲ. ಧಾರ್ಮಿಕ ಭಾವನೆ ಕೆರಳಿಸುವ ಅಥವಾ ಪ್ರಚೋದನಕಾರಿ ಭಾಷಣ ಮಾಡಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಅನುಮತಿ ಇಲ್ಲದೆ ಪೋಸ್ಟರ್, ಬ್ಯಾನರ್ ಅಳವಡಿಸಲು ಮತ್ತು ಭಿತ್ತಿಪತ್ರ, ಕರಪತ್ರಗಳ ಹಂಚಿಕೆಗೂ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಇದೇ ವೇಳೆ ಮಾತನಾಡಿದ ಪೊಲೀಸ್ ಕಮಿಷನರ್ ಚಂದ್ರಶೇಖರ್, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಗ್ರೂಪ್ ಅಡ್ಮಿನ್ ಗಳು ಇಂಥಹ ಸಂದೇಶಗಳಿಗೆ ಜವಾಬ್ದಾರರಾಗುತ್ತಾರೆ ಎಂದು ತಿಳಿಸಿದರು.
ಈಗಾಗಲೇ ನಗರದ ಕೆಲ ಬೀದಿಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಇನ್ನಷ್ಟು ಸಿಸಿಟಿವಿಗಳನ್ನು ಹಾಕಲಾಗಿದೆ. ನಾಲ್ಕು ಹೈ ರೆಸೆಲ್ಯೂಶನ್ ಡ್ರೋನ್ ಕ್ಯಾಮರಾಗಳು ಕಾರ್ಯಾಚರಿಸಲಿವೆ. ಇನ್ನು ಅಲ್ಲಲ್ಲಿ ಪೊಲೀಸ್ ಕಣ್ಗಾವಲಿರುತ್ತದೆ. ಗಡಿ ಪ್ರದೇಶಗಳಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.
ಹಾಗಂತ ಸಾರ್ವಜನಿಕರು ಯಾವುದೇ ಭಯಪಡಬೇಕಾಗಿಲ್ಲ. ಸಾರ್ವಜನಿಕರ ಸಂಪೂರ್ಣ ಜವಾಬ್ದಾರಿ ಪೊಲೀಸರ ಮೇಲಿದೆ ಎಂದು ಅಭಯ ನೀಡಿದರು.
ಕೇರಳ ಸೇರಿದಂತೆ ಗಡಿ ಭಾಗದಲ್ಲಿ ಚೆಕ್ಪೋಸ್ಟ್ ರಚಿಸಲಾಗಿದೆ. ವೀಡಿಯೊ ಕ್ಯಾಮೆರಾಗಳ ಸಹಿತ ಗಸ್ತು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದ್ದರೂ ಹತ್ತು ನಿಮಿಷದೊಳಗೆ ಸ್ಥಳಕ್ಕೆ ಧಾವಿಸಲು ಬೇಕಾದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.
ಈ ವೇಳೆ ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಪುತ್ತೂರು ಉಪವಿಭಾಗಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.












Click it and Unblock the Notifications