ಬೆಳ್ತಂಗಡಿ ಬಿಜೆಪಿಗೆ ಆಘಾತ, ಕಮಲ ಬಿಟ್ಟು 'ಕೈ' ಹಿಡಿದ ಗೌಡದ್ವಯರು
ಮಂಗಳೂರು, ಮೇ 02: ಕರಾವಳಿಯಲ್ಲಿ ಚುನಾವಣಾ ಪ್ರಚಾರ ಮುಗಿಲು ಮುಟ್ಟಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಪರ ತಾರಾ ಪ್ರಚಾರಕರು ಅಬ್ಬರಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಹಾಗು ಕಾಂಗ್ರೆಸಿಗೆ ಭಿನ್ನಮತೀಯರ ಕಾಟ ತಲೆನೋವಾಗಿ ಪರಿಣಮಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆದಿದೆ. ಆದರೆ ಮಂಗಳೂರು ಉತ್ತರ ಕ್ಷೇತ್ರ, ಪುತ್ತೂರು ಮತ್ತು ಬೆಳ್ತಂಗಡಿಯ ಬಿಜೆಪಿಯಲ್ಲೇ 'ಬಿ' ಬಣ ಸೃಷ್ಟಿಯಾಗಿದ್ದು, ಪ್ರಚಾರ ಕಾರ್ಯಕ್ಕೆ ತೊಡಕಾಗಿದೆ.
ಪುತ್ತೂರಿನಲ್ಲಿ ಅತೃಪ್ತರ ಬಂಡಾಯದ ನಡುವೆ ಗೆಲುವು ಯಾರಿಗೆ ?
ಈ ಮಧ್ಯೆ, 2013 ರ ಚುನಾವಣೆಯಲ್ಲಿ ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಂಜನ್ ಜಿ. ಗೌಡ ಮತ್ತು ಅವರ ತಂದೆ, ಮಾಜಿ ಸಚಿವ ಗಂಗಾಧರ ಗೌಡ ಬಿಜೆಪಿಯನ್ನು ತೊರೆಯಲು ನಿರ್ಧರಿಸಿದ್ದಾರೆ. ರಂಜನ್ ಗೌಡ ಕಳೆದ 4 ವರ್ಷಗಳಿಂದ ಬೆಳ್ತಂಗಡಿ ಕ್ಷೇತ್ರದಾದ್ಯಂತ ಯುವಕರನ್ನು ಸಂಘಟಿಸಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದರು. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡದೆ ಯುವ ಮೋರ್ಚಾ ಮುಖಂಡ ನ್ಯಾಯವಾದಿ ಹರೀಶ್ ಪೂಂಜಾ ಅವರಿಗೆ ಪಕ್ಷ ಟಿಕೆಟ್ ನೀಡಿದೆ.
ಪಕ್ಷದ ಈ ನಿರ್ಧಾರ ರಂಜನ್ ಗೌಡ ಪಾಲಿಗೆ ನುಂಗಲಾರದ ತುತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಟಸ್ಥ ನೀತಿ ಅನುಸರಿಸುತ್ತಿದ್ದ ರಂಜನ್ ಗೌಡ ತಮ್ಮ ರಾಜಕೀಯ ಭವಿಷ್ಯವನ್ನು ಕಾಂಗ್ರೆಸ್ ನಲ್ಲಿ ಅರಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಜೊತೆ ಈ ಕುರಿತು ಮಾತುಕತೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಡಿಕೆಶಿ ಸಾರಥ್ಯದಲ್ಲಿ ರಂಜನ್ ಗೌಡ ಮತ್ತು ಗಂಗಾಧರ ಗೌಡ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಈಗಾಗಲೇ ಬೆಳ್ತಂಗಡಿಯಲ್ಲಿ ಹಿಂದೂ ಸಂಘಟನೆ ಪ್ರಭಾವಿ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು, ವಸಂತ ಬಂಗೇರಾ ಪರ ಪ್ರಚಾರ ನಡೆಸಿದ್ದಾರೆ. ಇದೀಗ ಕ್ಷೇತ್ರದಲ್ಲಿ ಗೌಡದ್ವಯರ ಸೇರ್ಪಡೆಯಿಂದ ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.