ಮಂಗಳೂರು: ಮೋದಿ ಕಾರ್ಯಕ್ರಮ, ಕಟೀಲು ವಿರುದ್ಧ ಪೋಸ್ಟ್- ಎರಡು ಪ್ರಕರಣ ದಾಖಲು
ಮಂಗಳೂರು, ಆಗಸ್ಟ್, 31: ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಕಾರ್ಯಕ್ರಮ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಆಕ್ಷೇಪಾರ್ಹ ರೀತಿಯಲ್ಲಿ ಪೋಸ್ಟ್ ವೈರಲ್ ಆಗಿದ್ದವು. ಹೀಗೆ ಪೋಸ್ಟ್ ಮಾಡಿರುವ ಆರೋಪದ ಮೇಲೆ ಎರಡು ಪ್ರಕರಣಗಳು ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಜೊತೆಗೆ ಜಂಟಿ ಸುದ್ದಿಗೋಷ್ಠಿಯನ್ನು ಮಾಡಲಾಯಿತು. ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ಗೊಂದಲ ಉಂಟು ಮಾಡಲು ಕೆಲವೊಂದು ವಾಟ್ಸ್ಆ್ಯಪ್ ಗ್ರೂಪ್ ಸೃಷ್ಟಿಸಿರುವುದು ಗಮನಕ್ಕೆ ಬಂದಿದೆ. ಇಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳನ್ನು ನಮ್ಮ ಸಾಮಾಜಿಕ ಜಾಲತಾಣ ಸೆಲ್ ಗಮನಿಸುತ್ತಿದೆ. ಆಕ್ಷೇಪಾರ್ಹ ರೀತಿಯಲ್ಲಿ ಪೋಸ್ಟ್ ಮಾಡಿದ್ದು ಕಂಡುಬಂದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಆರೋಪಿಗಳಿಗೆ ವಿಧಿಸಿದ ಮಾನದಂಡಗಳು:
ಅಪರಾಧವಲ್ಲದ ಗೊಂದಲ ಪ್ರಕರಣ ಆದಲ್ಲಿ ಅಂತಹ ಆರೋಪಿಗಳ ಮೇಲೆ 107 ಅಥವಾ 110 ಪ್ರಕರಣ ದಾಖಲಿಸಲಾಗುತ್ತದೆ. ಹಾಗೂ ಇಂತಿಷ್ಟು ಲಕ್ಷ ರೂಪಾಯಿ ಹಣವನ್ನು ಶೂರಿಟಿ ಪಡೆದು ಬೈಂಡಿಗ್ ಮಾಡಲಾಗುತ್ತದೆ. ಈಗಾಗಲೇ ಪ್ರಕರಣ ದಾಖಲಾದ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳುವ ಕಾರ್ಯ ಮಾಡಲಾಗುತ್ತಿದೆ. ಆದರೆ ಆರೋಪಿಗಳು ಪ್ರಕರಣ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರ ಬಂಧನವಾಗಲಿದೆ ಎಂದು ಎನ್.ಶಶಿಕುಮಾರ್ ತಿಳಿಸಿದರು.

ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ:
ಬಳಿಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾತನಾಡಿ, ಪ್ರಧಾನಿ ಮೋದಿ ಎನ್ಎಂಪಿಎ, ಎಂಆರ್ಪಿಎಲ್ನ 6 ವಿವಿಧ ಬಹುಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕೊಚ್ಚಿನ್ನಿಂದ ಆಗಮಿಸುವ ಪ್ರಧಾನಿ ಅವರು ಎನ್ಎಂಪಿಎಗೆ ತೆರಳಲಿದ್ದಾರೆ. ಅಲ್ಲಿಂದ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಫಲಾನುಭವಿಗಳಿಗೆ ಯೋಜನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು.
ವ್ಯಾಪಾರಿಗಳಿಗೆ ಅಡ್ಡಿ ಮಾಡಿಲ್ಲ ಎಂದು ಸ್ಪಷ್ಟನೆ:
ಕಾರ್ಯಕ್ರಮದ ಯಶಸ್ಸಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಜನ ಭಾಗಿ ಆಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಸಾರ್ವಜನಿಕರು ಮುಂಚಿತವಾಗಿ ಬಂದು ನೂಕುನುಗ್ಗಲು, ಗೊಂದಲ ಆಗದಂತೆ ಸಹಕರಿಸಬೇಕು. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಕಾರ್ಯಕ್ರಮ ನಡೆಯುತ್ತಿರುವ ಮೈದಾನದ ಅಕ್ಕ ಪಕ್ಕದಲ್ಲಿ ಯಾವುದೇ ಅಂಗಡಿ - ಮುಂಗಟ್ಟುಗಳನ್ನು ಮುಚ್ಚುವುದಿಲ್ಲ. ಸುರಕ್ಷತೆ ಹಾಗೂ ಆಯೋಜನೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ದೃಷ್ಟಿಯಿಂದ ಕೆಲವೊಂದು ಆಯ್ದ ಅಂಗಡಿಗಳನ್ನು ಮಾತ್ರ ಮುಚ್ಚುವಂತೆ ಮನವಿ ಮಾಡಿದ್ದೇವೆ. ಫಲಾನುಭವಿಗಳಿಗೆ ಕಡ್ಡಾಯವಾಗಿ ಬರಬೇಕು ಎಂದು ಯಾವುದೇ ಒತ್ತಡ ಹೇರಿಲ್ಲ. ಎಲ್ಲರಿಗೂ ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ. ಇಚ್ಛೆ ಉಳ್ಳವರು ಮಾತ್ರ ಆಗಮಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಹೇಳಿದರು.












Click it and Unblock the Notifications