ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ
ಮಂಗಳೂರು, ಆಗಸ್ಟ್ 10: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 9ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿಯಿರುವ ಮಂಗಳಾ ಬಾರ್ ರಸ್ತೆಯಲ್ಲಿ ಇಬ್ಬರು ಯುವಕರು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮೊಹಮ್ಮದ್ ಅಶ್ರಫ್(37 ), ಜಾಫರ್ ಶರೀಫ್ (32) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ಇಬ್ಬರಿಂದ ಒಟ್ಟು 500 ಗ್ರಾಂ ಗಾಂಜಾ, ಒಂದು ದ್ವಿಚಕ್ರ ವಾಹನ, 2 ಮೊಬೈಲ್ ಫೋನ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಬೈಕ್ ಹಾಗೂ ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ 48,080 ಆಗಿದ್ದು, ಗಾಂಜಾವನ್ನು ಆರೋಪಿಗಳು ಕೋಲಾರ ಕಡೆಯಿಂದ ಖರೀದಿ ಮಾಡಿ, ನಗರದಲ್ಲಿ ಮಾರಾಟ ಮಾಡಲು ತಂದಿರುವುದಾಗಿ ಹೇಳಿದ್ದಾರೆ.
ಆರೋಪಿಗಳ ಪೈಕಿ ಅಶ್ರಫ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಜಾಫರ್ ಶರೀಫ್ ವಿರುದ್ಧ ಈ ಹಿಂದೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಕಳವು ಮಾಡಿದ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.












Click it and Unblock the Notifications