ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ
ಮಂಗಳೂರು, ಡಿಸೆಂಬರ್ 22 : ಮಂಗಳೂರಿನಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಎ ವಿರುದ್ಧ ಪ್ರತಿಭಟನೆ ನಡೆಸುವಾಗ ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿದ್ದರು.
ಭಾನುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಬ್ಬರು ಯುವಕರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು. ತಕ್ಷಣ ಪರಿಹಾರದ ಚೆಕ್ ಅನ್ನು ಕುಟುಂಬದವರಿಗೆ ಹಸ್ತಾಂತರ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳೂರು ನಗರಕ್ಕೆ ಶನಿವಾರ ಭೇಟಿ ನೀಡಿದ್ದ ಯಡಿಯೂರಪ್ಪ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ವಿವಿಧ ಸಂಘಟನೆಗಳು 1 ಕೋಟಿ ರೂ. ಪರಿಹಾರ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದವು.

ಡಿಸೆಂಬರ್ 19ರಂದು ನಡೆದ ಗೋಲಿಬಾರ್ನಲ್ಲಿ ನೌಶೀನ್ ಕುದ್ರೋಳಿ ಮತ್ತು ಅಬ್ದುಲ್ ಜಲೀಲ್ ಮೃತಪಟ್ಟಿದ್ದರು. ಗೋಲಿಬಾರ್ ಬಗ್ಗೆ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಆದರೆ, ತನಿಖೆ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಬಿ. ಎಸ್. ಯಡಿಯೂರಪ್ಪ ಗೋಲೀಬಾರ್ನಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರನ್ನು ಶನಿವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ನಗರದಲ್ಲಿ ಭಾನುವಾರ ಹಗಲು ಹೊತ್ತು ಕರ್ಫ್ಯೂ ಸಡಿಲಿಸಲಾಗಿದೆ. ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆ ತನಕ ಕರ್ಫ್ಯೂ ಇರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.











Click it and Unblock the Notifications