ದಕ್ಷಿಣ ಕನ್ನಡ: ಕೋಮುಗಲಭೆಗೆ ಪ್ರಚೋದನೆ, ಇಬ್ಬರ ಗಡಿಪಾರು
ದಕ್ಷಿಣ ಕನ್ನಡ, ಡಿಸೆಂಬರ್ 30: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಹೆಚ್ಚುತ್ತಿರುವ ಮತೀಯ ಗಲಭೆಗೆ ಕಾರಣಕರ್ತರನ್ನು ಗುರುತಿಸುವಲ್ಲಿ ಪೊಲೀಸ್ ಇಲಾಖೆ ತೊಡಗಿದ್ದು, ಈ ಸಂಬಂಧ ಇಬ್ಬರನ್ನು ಗಡಿಪಾರು ಮಾಡಿದೆ.
ಮತೀಯ ಗಲಭೆಗೆ ಪ್ರಚೋದನೆ ನಿಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಖಲೀಲ್ ಎಂಬುವವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

'ಗಡಿಪಾರಿಗೆ ಗುರಿಯಾಗಿರುವ ಇಬ್ಬರೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾರೆ. ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಮತೀಯ ಗಲಭೆಗೆ ಕಾರಣರಾಗಿದ್ದರು' ಎಂದು ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈ ಇಬ್ಬರನ್ನೂ ಗಡಿಪಾರು ಮಾಡಿ ಆದೇಶ ಹೊರಡಿಸುವಂತೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ಹಲವು ಬಾರಿ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಯವರು, ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಅದರಂತೆ ಇಬ್ಬರನ್ನೂ ಜಿಲ್ಲೆಯಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications