ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್
ಮಂಗಳೂರು, ಸೆಪ್ಟೆಂಬರ್ 14 : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಶುಕ್ರವಾರ ಮಂಗಳೂರು ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಆರೋಪಿಗಳಾದ ಭಾಸ್ಕರ್ ಶೆಟ್ಟಿ ಅವರ ಪುತ್ರ ನವನೀತ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ.
ಕಳೆದ ಸೋಮವಾರ ಮಂಗಳೂರು ಕಾರಾಗೃಹದಲ್ಲಿ ಬಜಿಲಕೇರಿ ಧನರಾಜ್ ಮತ್ತು ತಂಡ ನವನೀತ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರ ಮೇಲೆ ಮಾರಣಾಂತಿಕ ದಾಳಿ ನಡೆಸಿತ್ತು.
ಈ ಘಟನೆಯಲ್ಲಿ ಗಾಯಗೊಂಡಿದ್ದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್ ಅವರನ್ನು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮತ್ತೆ ಅಹಿತಕರ ಘಟನೆ ನಡೆಯದಂತೆ ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಶಿವಮೊಗ್ಗ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ .
2016 ಜುಲೈಯಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ನಡೆದಿತ್ತು. ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ ಭಟ್ ಈ ಪ್ರಕರಣದ ಪ್ರಮುಖ ಆರೊಪಿಗಳಾಗಿದ್ದಾರೆ.
ಈ ಪ್ರಕರಣದ ವಿಚಾರಣೆ ನ್ಯಾಯಾಲಯ ನಡೆಯುತ್ತಿದ್ದು ಆರೋಪಿಗಳನ್ನು ಮಂಗಳೂರು ಕಾರಾಗೃಹದಲ್ಲಿ ಇರಿಸಲಾಗಿತ್ತು.