ಮಂಗಳೂರು: ಜೈಲು ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಕೈದಿ ಬಲಿ? & ಇತರ ಸುದ್ದಿ
ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಇನ್ನೊಂದು ಪ್ರಕರಣದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಂಗಳೂರು, ಎಪ್ರಿಲ್ 3: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟವರನ್ನ ಬೆಳುವಾಯಿಯ ಸದಾನಂದ (40) ಎಂದು ಗುರುತಿಸಲಾಗಿದೆ.
ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2015ರಲ್ಲಿ ಸದಾನಂದ ಮೂಡುಬಿದಿರೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಶನಿವಾರ ತಡರಾತ್ರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.[ತೆಂಗು, ಅಡಿಕೆ ಇಳಿಸಲು ಯಂತ್ರ ಕಂಡುಹಿಡಿದ ಬಂಟ್ವಾಳದ ಹುಡುಗರು]
ಜಿಲ್ಲಾ ಕಾರಾಗೃಹದಲ್ಲಿ ಕೆಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಸದಾನಂದ ಬಳಲುತ್ತಿದ್ದರು. ಆದರೆ ಜೈಲು ಸಿಬ್ಬಂದಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸದೆ ನಿರ್ಲಕ್ಷ್ಯ ತಾಳಿದ್ದರು. ಸದಾನಂದನ ರೋಗ ಉಲ್ಬಣಿಸಿದ ಬಳಿಕ ಆಸ್ಪತ್ರೆಗೆ ಕೊಂಡೊಯ್ದಿದ್ದರಿಂದ ಸಾವನ್ನಪ್ಪಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಆಕಾಶಭವನ ಎಂಬಲ್ಲಿ ಭಾನುವಾರ ನಡೆದಿದೆ.[ಇದು ಮಂಗಳೂರು ಟ್ರಾಫಿಕ್ ಪೊಲೀಸರ ಸಿನಿಮೀಯ ಚೇಸಿಂಗ್ ಸ್ಟೋರಿ..!]
ಚಂದ್ರಶೇಖರ್ ಎಂಬವರ ಪುತ್ರಿ ಮನೀಶಾ (21) ಆತ್ಮಹತ್ಯೆ ಮಾಡಿಕೊಂಡಾಕೆ. ಮೂರನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಈಕೆಗೆ ಕಣ್ಣು ಮತ್ತು ಕಿವಿಯ ರೋಗದ ಸಮಸ್ಯೆ ಇತ್ತು. ಅದಕ್ಕಾಗಿ ವೈದ್ಯರಿಂದ ಚಿಕಿತ್ಸೆಯೂ ನಡೆಯುತ್ತಿತ್ತು. ಇದರಿಂದ ಖಿನ್ನತೆಗೊಳಗಾಗಿದ್ದ ಈಕೆ ರವಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮಾರು 10ರಿಂದ 12ರ ಮಧ್ಯೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತಳ ತಂದೆ ಚಂದ್ರಶೇಖರ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ಬಿಐಯೊಂದಿಗೆ ಎಸ್ಬಿಎಂ ವಿಲೀನ: ಮಂಗಳೂರಿನಲ್ಲೂ ಪ್ರಕ್ರಿಯೆ ಶುರು
ಸ್ಟೇಟ್ ಬ್ಯಾಂಕ್ ಆಫ್ ಮೈಸೂರು-ಸ್ಟೇಟ್ ಬ್ಯಾಂಕ್ ಇಂಡಿಯಾ ವಿಲೀನ ಪ್ರಕ್ರಿಯೆ ಮಂಗಳೂರಿನಲ್ಲೂ ಚುರುಕು ಪಡೆದುಕೊಂಡಿದೆ.
ಎಸ್ಬಿಎಂ ಮಂಗಳೂರಿನಲ್ಲಿ 8 ಶಾಖೆಗಳನ್ನು ಹೊಂದಿದೆ. ಇವುಗಳಲ್ಲಿ ಹೆಚ್ಚಿನ ಶಾಖೆಗಳು ಹೆಸರು ಬದಲಾವಣೆಯೊಂದಿಗೆ ಆಯಾ ಪ್ರದೇಶದಲ್ಲಿ ಉಳಿದುಕೊಳ್ಳುವ ಸಾಧ್ಯತೆ ಇದೆ. ಇದರಿಂದ ಗ್ರಾಹಕರಿಗೆ ತೊಂದರೆಯಾಗುವುದಿಲ್ಲ.
ಸದ್ಯದ ಬ್ಯಾಂಕ್ ನಿಯಮಾವಳಿ ಪ್ರಕಾರ 500 ಮೀಟರ್ ವ್ಯಾಪ್ತಿಯೊಳಗೆ ಬ್ಯಾಂಕಿನ ಇನ್ನೊಂದು ಶಾಖೆ ಕಾರ್ಯ ನಿರ್ವಹಿಸುವ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ 500 ಮೀಟರ್ ವ್ಯಾಪ್ತಿಯೊಳಗೆ ಕಾರ್ಯ ನಿರ್ವಹಿಸುತ್ತಿರುವ ಎಸ್ಬಿಎಂ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಿಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ.