ಕೇರಳ-ಕರ್ನಾಟಕ ಗಡಿ ಬಂದ್ ಮಾಡಿದ್ದು ಯಾವ ಕಾನೂನಿನ ಅನ್ವಯ?
ಮಂಗಳೂರು, ಮಾರ್ಚ್ 10; ಯಾವ ಕಾನೂನಿನ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳದ ಗಡಿಯಲ್ಲಿ ಪ್ರವೇಶ ನಿರ್ಬಂಧಿಸಿದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಶ್ನೆ ಮಾಡಿದೆ.
ಕಾಸರಗೋಡು ಮೂಲದ ವಕೀಲ ಬಿ. ಸುಬ್ಬಯ್ಯ ರೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠದಲ್ಲಿ ನಡೆಯಿತು. ಕೇರಳದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾದ ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳ ಗಡಿಯನ್ನು ಬಂದ್ ಮಾಡಿದೆ.
ಬೇರೆ ಜಿಲ್ಲೆಗಳಿಂದ ಕೇರಳದ ಜನರು ಕರ್ನಾಟಕಕ್ಕೆ ಪ್ರವೇಶಿಸಬಹುದು. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರ ಪ್ರವೇಶಿಸಬಾರದೇ?. ದಕ್ಷಿಣ ಕನ್ನಡಕ್ಕೆ ಪ್ರವೇಶಿಸಲು 23 ಕಡೆ ಅವಕಾಶವಿದೆ. ಆದರೆ, ನಾಲ್ಕು ಕಡೆಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ? ಯಾವ ಕಾನೂನಿನಡಿ ನಿರ್ಬಂಧ ಹೇರಲಾಗಿದೆ? ಎಂದು ನ್ಯಾಯಾಲಯ ಪ್ರಶ್ನೆ ಮಾಡಿತು.

ಕರ್ನಾಟಕ ಸರ್ಕಾರದ ಫೆಬ್ರವರಿ 16ರ ಸುತ್ತೋಲೆ ಪ್ರಕಾರ ಕೇರಳದಿಂದ ಆಗಮಿಸುವ ಜನರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ಕೇಳಬಹುದು. ಪ್ರವೇಶಕ್ಕೆ ನಿರ್ಬಂಧ ಹೇರುವಂತಿಲ್ಲ. ಪ್ರವೇಶ ದ್ವಾರ ಮುಚ್ಚುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆಯೇ? ಎಂದು ಕೋರ್ಟ್ ಕೇಳಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರಶ್ನಿಸಿ ವಕೀಲ ಬಿ. ಸುಬ್ಬಯ್ಯ ರೈ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರು ಎತ್ತಿರುವ ಕಾನೂನು ಸಮಸ್ಯೆಗಳನ್ನು ಜಿಲ್ಲಾಡಳಿತ ಎದುರಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ.
ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದ ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳ-ಕರ್ನಾಟಕ ಗಡಿಯನ್ನು ಬಂದ್ ಮಾಡಿತು. ನಾಲ್ಕು ಗಡಿಯ ಮೂಲಕ ಮಾತ್ರ ಕೇರಳದಿಂದ ಕರ್ನಾಟಕಕ್ಕೆ ಆಗಮಿಸಲು ಅವಕಾಶ ನೀಡಿತು. ಇದಕ್ಕೆ ಕೇರಳ ಸರ್ಕಾರದ ಸಹ ಆಕ್ಷೇಪ ವ್ಯಕ್ತಪಡಿಸುತ್ತಿದೆ.












Click it and Unblock the Notifications