ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನ ಬಂಧನ
ಮಂಗಳೂರು, ಡಿಸೆಂಬರ್. 21 : ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನೊಬ್ಬನನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ . ಬಂಧಿತನಿಂದ ಅಕ್ರಮ ಪಿಸ್ತೂಲು ಹಾಗೂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನು ಹೊಯಿಗೆ ಬಝಾರ್ ನಿವಾಸಿ ಹೇಮಂತ್ ಕುಮಾರ್ (47) ಎಂದು ಗುರುತಿಸಲಾಗಿದೆ.
ಈತ ನಗರದ ಹೊಯಿಗೆ ಬಝಾರ್ ಪರಿಸರದಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯಾಗಿದ್ದು, ಆತನಿಂದ ಅಕ್ರಮವಾಗಿ ಪಿಸ್ತೂಲ್ ಹಾಗೂ ಇತರ ಮಾರಕಾಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಪಿಸ್ತೂಲು ಹಾಗು ಇತರ ಮಾರಕ ಆಯುಧ ಹೊಂದಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಹೇಮಂತ ಕುಮಾರ್ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರ ಎಂದು ಹೇಳಲಾಗಿದೆ.
ಈ ಹಿಂದೆ ಅನೀಷ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯೋರ್ವನು ಯಾವುದೋ ಕೃತ್ಯ ನಡೆಸುವ ಉದ್ದೇಶದಿಂದ ತನ್ನ ವಶದಲ್ಲಿ ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ಹಾಗೂ ಸಜೀವ ಮದ್ದುಗುಂಡುಗಳು, ತಲವಾರುಗಳನ್ನು ಇಟ್ಟುಕೊಂಡಿದ್ದಾನೆ ಎಂಬ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಬಂಧಿತ ಹೇಮಂತ ವಶದಲ್ಲಿದ್ದ ಪಿಸ್ತೂಲ್ ಹಾಗೂ 4 ಸಜೀವ ಮದ್ದುಗುಂಡುಗಳು, 2 ತಲವಾರು, ಚೂರಿ, ಬೇಸ್ ಬಾಲ್ ಸ್ಟಿಕ್ ಹಾಗೂ ಎರಡು ಮೊಬೈಲ್ ಫೋನುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನು ಈ ಹಿಂದೆ ಮಂಗಳೂದು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕದ್ರಿ ಪಾರ್ಕ್ ಬಳಿ 2014 ರಲ್ಲಿ ನಡೆದ ಅನೀಷ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿದೆ. ಈತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.












Click it and Unblock the Notifications