'ತಮ್ಮ ರಾಜ್ಯದ ಬ್ಯಾಂಕ್ ಉಳಿಸಲು ನಮ್ಮ ರಾಜ್ಯದ ಬ್ಯಾಂಕ್ ಹಾಳು ಮಾಡಿದ ಪಿಎಂ'
ಮಂಗಳೂರು, ಜವನರಿ 03: ಲಾಭದಲ್ಲಿರುವ ಮತ್ತು ದಕ್ಷಿಣ ಕನ್ನಡ ಮೂಲದ ವಿಜಯಾ ಬ್ಯಾಂಕ್ ಅನ್ನು ಇತರ ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯನ್ನು ವಿರೋಧಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲಾಭದಲ್ಲಿರುವ ವಿಜಯ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು.

ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿಜಯಾ ಬ್ಯಾಂಕ್ ಸುಮಾರು 200 ಕೋಟಿ ರೂಪಾಯಿ ಲಾಭದಲ್ಲಿದೆ. ಬರೋಡಾ ಬ್ಯಾಂಕ್ 3 ಸಾವಿರ ಕೋಟಿ ರೂ. ನಷ್ಟದಲ್ಲಿದೆ. ನಷ್ಟದಲ್ಲಿರುವ ಈ ಬ್ಯಾಂಕನ್ನು ವಿಜಯಾ ಬ್ಯಾಂಕ್ ನೊಂದಿಗೆ ವಿಲೀನಗೊಳಿಸಬಹುದಿತ್ತು. ಆದರೆ ಪ್ರಧಾನಿ ತನ್ನ ತವರು ರಾಜ್ಯದ ಬ್ಯಾಂಕನ್ನು ಉಳಿಸುವ ಸಲುವಾಗಿ ವಿಜಯಾ ಬ್ಯಾಂಕನ್ನು ವಿಲೀನಗೊಳಿಸಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು.
ಕೇಂದ್ರದ ಈ ನಿಲುವಿನ ವಿರುದ್ಧ ಸಂಸದರು ಮತ್ತು ಬಿಜೆಪಿ ಮುಖಂಡರು ಧ್ವನಿ ಎತ್ತದಿರುವುದು ವಿಪರ್ಯಾಸ ಎಂದು ಖಾದರ್ ಕಿಡಿಕಾರಿದರು.












Click it and Unblock the Notifications