Vande Bharat Express; ಮಂಗಳೂರಿಗೆ ಯಾವಾಗ ರೈಲು?, ಸಚಿವರ ಹೇಳಿಕೆ
ಮಂಗಳೂರು, ಆಗಸ್ಟ್ 01; ದೇಶದ ವಿವಿಧ ರಾಜ್ಯಗಳಂತೆ ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕರ್ನಾಟಕದಲ್ಲಿಯೂ ಬೇಡಿಕೆ ಇದೆ. ಈಗಾಗಲೇ ರಾಜ್ಯದಲ್ಲಿ ಎರಡು ವಂದೇ ಭಾರತ್ ರೈಲುಗಳು ಓಡುತ್ತಿವೆ, ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ.
ರಾಜ್ಯದಲ್ಲಿ ಮೈಸೂರು-ಬೆಂಗಳೂರು-ಚೆನ್ನೈ ನಡುವೆ 2022ರಲ್ಲಿ ಮೊದಲ ವಂದೇ ಭಾರತ್ ರೈಲು ಆರಂಭವಾಯಿತು. ಬಳಿಕ 2023ರಲ್ಲಿ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವೆ ರೈಲು ಸೇವೆ ಆರಂಭಿಸಲಾಗಿದೆ. ಇನ್ನೂ ಹಲವು ಮಾರ್ಗದಲ್ಲಿ ರೈಲು ಓಡಿಸಬೇಕು ಎಂಬ ಬೇಡಿಕೆ ಇದೆ.

ಬೆಂಗಳೂರು-ಹೈದರಾಬಾದ್, ಬೆಂಗಳೂರು-ಮಂಗಳೂರು, ಮೈಸೂರು-ಮಂಗಳೂರು, ಬೆಂಗಳೂರು-ಶಿವಮೊಗ್ಗ, ಬೆಂಗಳೂರು-ಬೆಳಗಾವಿ, ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸಬೇಕು ಎಂದು ರೈಲ್ವೆ ಇಲಾಖೆ ಮುಂದೆ ಬೇಡಿಕೆ ಇಡಲಾಗಿದೆ.
ರೈಲ್ವೆ ಸಚಿವರ ಹೇಳಿಕೆ; ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಪ್ರಶ್ನೆಗೆ ಉತ್ತರ ನೀಡುವಾಗ ಕರ್ನಾಟಕದ ಕರಾವಳಿ ಭಾಗವಾದ ಮಂಗಳೂರಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆರಂಭಿಸುವ ಕುರಿತು ಮಾತನಾಡಿದ್ದಾರೆ.
ಸಚಿವರು ತಮ್ಮ ಉತ್ತರದಲ್ಲಿ, "ಮಂಗಳೂರು-ಬೆಂಗಳೂರು ಮಾರ್ಗದಲ್ಲಿ 6 ಜೋಡಿ ರೈಲುಗಳು ಈಗ ಕಾರ್ಯಾಚರಣೆ ನಡೆಸುತ್ತಿವೆ. ದೇಶದ ವಿವಿಧ ಕಡೆಗಳಲ್ಲಿ 50 ವಂದೇ ಭಾರತ್ ರೈಲುಗಳು ಸಂಚಾರ ನಡೆಸುತ್ತಿವೆ. ಹೊಸ ವಂದೇ ಭಾರತ್ ರೈಲುಗಳ ಆರಂಭವು ನಿರಂತರ ಪ್ರಕ್ರಿಯೆ, ಕಾರ್ಯಾಚರಣೆಯ ಸಾಧ್ಯತೆ, ಪ್ರಯಾಣಿಕರ ದಟ್ಟಣೆ ಮುಂತಾದ ವಿಷಯಗಳನ್ನು ಪರಿಗಣನೆಗೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದಾರೆ.
ಕೇರಳದ ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಇದನ್ನು ಪಕ್ಕದ ಮಂಗಳೂರು ತನಕ ವಿಸ್ತರಣೆ ಮಾಡಬೇಕು ಎಂದು ಈ ಹಿಂದೆಯೇ ರೈಲ್ವೆ ಇಲಾಖೆಗೆ ಮನವಿ ಮಾಡಲಾಗಿದೆ. ಆದರೆ ಈ ಬೇಡಿಕೆಗೆ ಒಪ್ಪಿಗೆ ಸಿಕ್ಕಿಲ್ಲ. ಇದರ ನಡುವೆಯೇ ಬೆಂಗಳೂರು-ಮಂಗಳೂರು, ಮೈಸೂರು-ಮಂಗಳೂರು ನಡುವೆ ಹೊಸ ವಂದೇ ಭಾರತ್ ಓಡಿಸಬೇಕು ಎಂದು ಬೇಡಿಕೆ ಇಡಲಾಗಿದೆ.
ಮಂಗಳೂರಿಗೆ ವಂದೇ ಭಾರತ್ ರೈಲು ಓಡಿಸಲು ಪೂರಕವಾಗಿ ಹಲವು ಕಾಮಗಾರಿಗಳನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಕೈಗೊಳ್ಳಲಾಗಿದೆ. ಕಾಮಗಾರಿಗಳು ಪೂರ್ಣಗೊಳ್ಳಲು ಸುಮಾರು 6 ತಿಂಗಳು ಬೇಕು ಎಂದು ಅಂದಾಜಿಸಲಾಗಿದೆ. ಈಗಿರುವ ಪಿಟ್ಲೇನ್ನಲ್ಲಿಯೇ ಕೆಲ ಮಾರ್ಪಾಡು ಮಾಡಿ, ಎಲೆಕ್ಟ್ರಿಕ್ ಲೈನ್ ಅಳವಡಿಕೆ ಮಾಡಿ, ವಂದೇ ಭಾರತ್ ಕೋಚ್ಗಳ ನಿರ್ವಹಣೆಗಾಗಿ ವ್ಯವಸ್ಥೆ ಮಾಡಲಾಗುತ್ತಿದೆ.
ಮಂಗಳೂರು-ಮುಂಬೈ ನಡುವೆಯೂ ವಂದೇ ಭಾರತ್ ರೈಲು ಓಡಿಸಬೇಕು ಎಂದು ಪಶ್ಚಿಮ ರೈಲ್ವೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹನುಮಂತ ಕಾಮತ್ ಸಹ ಮನವಿ ಮಾಡಿದ್ದಾರೆ. ಮಂಗಳೂರಿಗೆ ವಂದೇ ಭಾರತ್ ರೈಲು ಯಾವಾಗ ಬರುತ್ತದೆ? ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಅದಕ್ಕೆ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ರೈಲ್ವೆಯ ಸೆಕ್ಷನ್ ಇಂಜಿನಿಯರ್ ಪ್ರವೀಣ್ ಕುಮಾರ್ ಕೆಲವು ದಿನಗಳ ಹಿಂದೆ ಹೇಳಿದ್ದರು.
ಮತ್ತೊಂದು ಕಡೆ ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ರೈಲ್ವೆ ಸಚಿವರಿಗೆ ಮನವಿಯೊಂದನ್ನು ಮಾಡಿದ್ದಾರೆ. ಗೋವಾ-ಮುಂಬೈ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಿಸಿದಲ್ಲಿ ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಕಾರವಾರ-ತಿರುಪತಿ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ವಯಾ ಬೆಂಗಳೂರು ಹೊಸದಾಗಿ ಆರಂಭ ಮಾಡಿದಲ್ಲಿ ಕರಾವಳಿ ಜಿಲ್ಲೆಗಳ ಹೆಚ್ಚಿನ ಉದ್ಯಮಗಳಿಗೆ ಹಾಗೂ ಮೀನುಗಾರರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ. ಈ ಕುರಿತು ರೈಲ್ವೆ ಸಚಿವರ ಗಮನ ಸೆಳೆಯಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications