K.T Gatti: ಹಿರಿಯ ಸಾಹಿತಿ, ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ
ಮಂಗಳೂರು, ಫೆಬ್ರವರಿ 19 : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಹಿತಿ ಕೆ.ಟಿ.ಗಟ್ಟಿ(85) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಫೆಬ್ರವರಿ 19) ಸೋಮವಾರ ಕೊನೆಯುಸಿರೆಳೆದಿದ್ದಾರೆ. ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಉಜಿರೆಯಲ್ಲಿ ನೆಲೆಸಿದ್ದರು.
ಕೆ.ಟಿ.ಗಟ್ಟಿ ಎಂದೇ ಪ್ರಸಿದ್ಧ ಪಡೆದ ಅವರು ಪೂರ್ಣ ಹೆಸರು ಕೂಡ್ಲು ತಿಮ್ಮಪ್ಪ ಗಟ್ಟಿ. ತಮ್ಮ ಹದಿನೇಳನೆ ವರ್ಷಕ್ಕೆ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದರು.

ಕೆ.ಟಿ.ಗಟ್ಟಿ ಅವರ ಸಾಹಿತ್ಯ ಕೃಷಿ
ಕನ್ನಡ, ತುಳು ಮತ್ತು ಇಂಗ್ಲಿಷ್ ಸಾಹಿತ್ಯಕ್ಕೆ ಕೆ.ಟಿ.ಗಟ್ಟಿ ಅವರ ಕೊಡುಗೆ ಅಪಾರವಾಗಿದ್ದು, ಇವರ ಸಾಹಿತ್ಯ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದ ಇವರು 1973ರಲ್ಲಿ ಮೊದಲ ಕಾದಂಬರಿ 'ಶಬ್ದಗಳು' ಬರೆದು ಪ್ರಕಟಿಸಿದ್ದರು. ಅಂದಿನಿಂದ ಕೆ.ಟಿ.ಗಟ್ಟಿಯವರು ಈವರೆಗೆ 48 ಕಾದಂಬರಿಗಳು 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನು ಬರೆದಿದ್ದಾರೆ.












Click it and Unblock the Notifications