ತೊಗಾಡಿಯಾಗೆ ನಿಷೇಧ, ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು, ಫೆ.4 : ಬೆಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ನಡೆಯಲಿರುವ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ವಿಎಚ್ಪಿ ಮುಖಂಡ ಪ್ರವೀಣ್ ತೊಗಾಡಿಯಾ ಅವರಿಗೆ ನಿರ್ಬಂಧ ಹೇರಿರುವುದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬುಧವಾರ ಮಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರು ಪೊಲೀಸರ ಈ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ಪ್ರವೇಶಿಸಿದಂತೆ ವಿಧಿಸಿರುವ ನಿರ್ಬಂಧವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಉಗ್ರವಾಗಿ ಹೋರಾಟ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.[ಬೆಂಗಳೂರು ಪ್ರವೇಶಿಸದಂತೆ ತೊಗಾಡಿಯಾಗೆ ನಿಷೇಧ]
ಫೆಬ್ರವರಿ 8 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶಕ್ಕೆ ದಕ್ಷಿಣ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ತೆರಳಲಿದ್ದಾರೆ. ಸಮಾವೇಶದ ಬಳಿಕ ಏನಾದರೂ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಪ್ರತಿಭಟನಾಕಾರರು ಹೇಳಿದರು. [ತೊಗಾಡಿಯಾ ಓಟಕ್ಕೆ ಬ್ರೇಕ್: ಬೆಂಕಿಗೆ ತುಪ್ಪ ಸುರಿಯಿತೇ ಸರಕಾರ?]

ಪ್ರತಿಭಟನೆಯಲ್ಲಿ ವಿಎಚ್ಪಿ ಮುಖಂಡರಾದ ಜಗದೀಶ್ ಶೇಣವ, ಜಿತೇಂದ್ರ ಕೊಟ್ಟಾರಿ, ಭಜರಂಗದಳದ ಪ್ರಮುಖರಾದ ಶರಣ್ ಪಂಪ್ವೆಲ್, ಪುನೀತ್ ಕೊಟ್ಟಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬೆಂಗಳೂರಿನಲ್ಲಿ ನಡೆಯುವ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳದಂತೆ ವಿಶ್ವ ಹಿಂದೂ ಪರಿಷತ್ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ಪೊಲೀಸರು ಮಂಗಳವಾರ ನಿಷೇಧ ಹೇರಿದ್ದರು. ಪ್ರಚೋದನಾಕಾರಿ ಭಾಷಣ ಮಾಡಬಹುದು ಎಂಬ ಮಾಹಿತಿ ಹಿನ್ನಲೆಯಲ್ಲಿ ಬೆಂಗಳೂರು ನಗರ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ಆದೇಶದಂತೆ ಫೆ.5ರಿಂದ 10ರ ವರೆಗೆ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ನಗರ ಪ್ರವೇಶಿಸುವಂತಿಲ್ಲ.












Click it and Unblock the Notifications