ನರೇಶ್ ಶೆಣೈ ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ
ಮಂಗಳೂರು, ಜೂನ್ 27 : ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈನನ್ನು ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಭಾನುವಾರ ಮಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ನರೇಶ್ ಶೆಣೈ ಬಂಧಿಸಿದ್ದರು.
ನಮೋ ಬ್ರಿಗೇಡ್ ಸಂಸ್ಥಾಪಕ ಮತ್ತು ವಿನಾಯಕ ಬಾಳಿಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈನನ್ನು ಸೋಮವಾರ ಮಂಗಳೂರಿನ 2ನೇ ಜೆಎಂಎಫ್ಸಿ (Judicial Magistrate First Class) ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪೊಲೀಸರ ಮನವಿಯಂತೆ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿತು. [ನರೇಶ್ ಶೆಣೈ ಪೊಲೀಸರಿಗೆ ಶರಣು?]

2016ರ ಮಾರ್ಚ್ 21ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಬಳಿ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಅವರ ಹತ್ಯೆ ನಡೆದಿತ್ತು. ಹತ್ಯೆಯ ಪ್ರಮುಖ ಆರೋಪಿ ನರೇಶ್ ಶೆಣೈಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು. ಜೂನ್ 26ರ ಭಾನುವಾರ ಉಡುಪಿಯಲ್ಲಿ ಅವರನ್ನು ಬಂಧಿಸಲಾಗಿತ್ತು. [ಬಾಳಿಗ ಹತ್ಯೆ : 770 ಪುಟಗಳ ಚಾರ್ಜ್ ಶೀಟ್]
700 ಪುಟಗಳ ಚಾರ್ಜ್ ಶೀಟ್ : ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರ ಜೂನ್ 23ರಂದು ನರೇಶ್ ಶೆಣೈ, ಶ್ರೀಕಾಂತ್, ಶಿವಪ್ರಸಾದ್, ವಿನೀತ್ ಪೂಜಾರಿ, ನಿಶಿತ್ ದೇವಾಡಿಗ, ಶೈಲೇಶ್, ಮಂಜುನಾಥ ಶೆಣೈ ವಿರುದ್ಧ 770 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಿಕ್ಕಿಬಿದ್ದಿರುವುದರಿಂದ, ತನಿಖೆಯನ್ನು ಮುಂದುವರಿಸಲು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದಾರೆ. ಮೂರು ತಿಂಗಳ ಕಾಲ ನರೇಶ್ ಶೆಣೈ ತಪ್ಪಿಸಿಕೊಳ್ಳಲು ಸಹಕಾರ ನೀಡಿದವರ ವಿರುದ್ಧವೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಜೂನ್ 30ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.












Click it and Unblock the Notifications