Breaking; ನಕ್ಸಲ್ ನಂಟು ಆರೋಪದಿಂದ ವಿಠಲ್ ಮಲೆಕುಡಿಯ ಮುಕ್ತ
ಮಂಗಳೂರು, ಅಕ್ಟೋಬರ್ 21; ನಕ್ಸಲರ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪದಿಂದ ವಿಠಲ್ ಮಲೆಕುಡಿಯ ಮತ್ತು ಆತನ ತಂದೆ ಮುಕ್ತರಾಗಿದ್ದಾರೆ. ವಿಠಲ್ ಮಲೆಕುಡಿಯ ನಕ್ಸಲ್ ನಂಟು ಪ್ರಕರಣದ ಅಂತಿಮ ತೀರ್ಪನ್ನು ನ್ಯಾಯಾಲಯ ಪ್ರಕಟಿಸಿದೆ.
ಗುರುವಾರ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದೆ. ನಕ್ಸಲ್ ನಂಟಿನ ಆರೋಪದಿಂದ ಮುಕ್ತಗೊಳಿಸಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಿಠಲ್ ಮಲೆಕುಡಿಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ.

ವಿಠಲ್ ಮಲೆಕುಡಿಯ ನಕ್ಸಲರ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿತ್ತು. 9 ವರ್ಷಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅಂತಿಮ ತೀರ್ಪು ಪ್ರಕಟವಾಗಿದೆ. ಆರೋಪ ಬಂದಾಗ ವಿಠಲ್ ಮಲೆಕುಡಿಯ ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು.
2012ರಲ್ಲಿ ಬಂಧನ; ನಕ್ಸಲರ ಜೊತೆ ನಂಟು ಹೊಂದಿದ ಆರೋಪದ ಮೇಲೆ ವಿಠಲ್ ಮಲೆಕುಡಿಯ ಮತ್ತು ಆತನ ತಂದೆಯನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆ ಬಂಧಿಸಿತ್ತು. ಮನೆಗೆ ಮೇಲೆ ದಾಳಿ ಮಾಡಿದಾಗ ಚುನಾವಣೆ ಬಹಿಷ್ಕಾರದ ಕರಪತ್ರ, ಭಗತ್ ಸಿಂಗ್ ಪುಸ್ತಕ, ನಕ್ಸಲ್ ಬರಹದ ಪತ್ರಿಕಾ ಕಟ್ಟಿಂಗ್ಗಳು ಪತ್ತೆಯಾಗಿದ್ದವು ಎಂದು ನಕ್ಸಲ್ ನಿಗ್ರಹ ಪಡೆ ಹೇಳಿತ್ತು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವುದರ ವಿರುದ್ದ ಹೋರಾಟ ನಡೆಸುತ್ತಿದ್ದ ವಿಠಲ್ ಮಲೆಕುಡಿಯಗೆ ನಕ್ಸಲ್ ನಂಟಿದೆ ಎಂದು ಬಂಧಿಸಿದ್ದ ನಕ್ಸಲ್ ನಿಗ್ರಹ ಪಡೆ ಬಳಿಕ ಇಬ್ಬರನ್ನು ವೇಣೂರು ಪೊಲೀಸರಿಗೆ ಒಪ್ಪಿಸಿತ್ತು.
ವಿಠಲ್ ಮಲೆಕುಡಿಯ ಬಂಧನವಾದಾಗ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಸೇರಿ ಕಮ್ಯುನಿಸ್ಟ್ ರಾಷ್ಟ್ರೀಯ ನಾಯಕರು ಮಂಗಳೂರು ಜೈಲಿಗೆ ಭೇಟಿ ನೀಡಿದ್ದರು. ಇಡೀ ದೇಶದಲ್ಲೇ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟವಾಗಿದ್ದು, ಆರೋಪ ಮುಕ್ತಗೊಳಿಸಲಾಗಿದೆ.












Click it and Unblock the Notifications