ಕೊಲೆ ಯತ್ನ, ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿ ಸೆರೆ
ಮಂಗಳೂರು, ಮಾರ್ಚ್ 29: ಕೊಲೆ ಯತ್ನ ಮತ್ತು ಗಾಂಜಾ ಮಾರಾಟ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ದಕ್ಷಿಣ ಉಪವಿಭಾಗ ವ್ಯಾಪ್ತಿಯ ಮುಳ್ಳಗುಡ್ಡೆ ನಿವಾಸಿ ಇಮ್ತಿಯಾಜ್ ಎಂಬಾತನನ್ನು ಕೊಟೆಕಾರು ಗ್ರಾಮದ ಅಜೀನಡ್ಕ ಎಂಬಲ್ಲಿ ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಈ ಹಿಂದೆ ಕೊಣಾಜೆ ಠಾಣಾ ವ್ಯಾಪ್ತಿಯ ಕೇರಳ ಗಡಿ ಪ್ರದೇಶವಾದ ನೆತ್ತಿಲಪದವು ಎಂಬಲ್ಲಿ ಗಾಂಜಾ ಮಾರಾಟ ಅಡ್ಡೆಯ ಮೇಲೆ ಪೊಲೀಸರ ತಂಡ ದಾಳಿ ನಡೆಸಿದ್ದ ಸಂದರ್ಭದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ತನ್ನ ಇನ್ನೊಬ್ಬ ಸಹಚರ ಮಹಮ್ಮದ್ ಅಜೀಜ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ತಿರುಗಾಡುತ್ತಾ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತ್ತು.
ದಾಳಿ ಸಂದರ್ಭದಲ್ಲಿ ನೆತ್ತಿಲ ಪದವು ಕಲ್ಲರಕೋಡಿ ಎಂಬಲ್ಲಿ ಸುಮಾರು 10.250 ಕೆ.ಜಿ. ಗಾಂಜಾ ವಶಪಡಿಸಿಕೊಂಡು ಅಜೀಜ್ ಎಂಬವರನ್ನು ಬಂಧಿಸಲಾಗಿತ್ತು.

ಬಂಧಿತ ಇಮ್ತಿಯಾಸ್ ಈ ಹಿಂದೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಳ್ಳುಗುಡ್ಡೆ ಎಂಬಲ್ಲಿ ಪಚ್ಚಿಲ ಅಜೀಜ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ದ ಈ ಹಿಂದೆ ಉಳ್ಳಾಲ ಠಾಣೆ, ಕೊಣಾಜೆ ಠಾಣೆ ಹಾಗೂ ಕಾವೂರು ಠಾಣೆಗಳಲ್ಲಿ ಕೊಲೆಯತ್ನ, ಹಲ್ಲೆ ಹಾಗೂ ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ.












Click it and Unblock the Notifications