ಧರ್ಮಸ್ಥಳದಲ್ಲಿ ನೀರಿನ ಅಭಾವ:ದರ್ಶನ ಮುಂದೂಡುವಂತೆ ವೀರೇಂದ್ರ ಹೆಗ್ಗಡೆ ಮನವಿ
ಮಂಗಳೂರು, ಮೇ 17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ತೀವ್ರಗೊಳ್ಳಲಾರಂಭಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ತೀವ್ರ ಬರ ಸೃಷ್ಟಿಯಾಗಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ತಾಪಮಾನ ಹೆಚ್ಚಳದಿಂದ ಅಂತರ್ಜಲ ಮಟ್ಟ ಕುಸಿಯಲಾರಂಭಿಸಿದ್ದು, ಜಲಮೂಲಗಳು ಬರಿದಾಗಲಾರಂಭಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರಲಾರಂಭಿಸಿದೆ. ಇದರಿಂದ ಜನ-ಜಾನುವಾರುಗಳು ತತ್ತರಿಸುವಂತಾಗಿದೆ.
ಮಂಗಳೂರಿನಲ್ಲಿ ನೀರಿಗೆ ಬರ, ಸಣ್ಣ ಕೈಗಾರಿಕೆಗಳು ಸ್ಥಗಿತಗೊಳ್ಳುವ ಭೀತಿ
ನೀರಿನ ಬರದ ಪರಿಣಾಮ ಇದೀಗ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳ ಮೇಲೆಯೂ ಬಿದ್ದಿದೆ. ರಾಜ್ಯದ ಹೆಸರಾಂತ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ವತಿಯಿಂದ ಭಕ್ತಾಧಿಗಳು ತಮ್ಮ ಪ್ರವಾಸವನ್ನು ಮುಂದೂಡಲು ಮನವಿ ಮಾಡಿದೆ.
ಜಿಲ್ಲೆಯಲ್ಲಿ ಜಿಲ್ಲಾಡಳಿತ ರೇಷನಿಂಗ್ ಮುಖಾಂತರ ನೀರು ಪೂರೈಸುತ್ತಿದ್ದು, ಕ್ಷೇತ್ರಕ್ಕೂ ನೀರಿನ ಸಮಸ್ಯೆ ಎದುರಾಗಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತಿದ್ದು, ಈ ಕಾರಣಕ್ಕಾಗಿ ಭಕ್ತಾಧಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಿದೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೂ ತಟ್ಟಿದ ನೀರಿನ ಬರದ ಬಿಸಿ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗಡೆ ಮನವಿ ಮಾಡಿಕೊಂಡಿದ್ದು, ಶ್ರೀ ಕ್ಷೇತ್ರದಲ್ಲಿ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ತರದಲ್ಲಿ ಕಡಿಮೆಯಾಗಿದೆ.ನೀರಿನ ಅಭಾವ ಇರುವುದರಿಂದ ಭಕ್ತಾದಿಗಳು ಹಾಗು ಪ್ರವಾಸಿಗರು ಕೆಲ ದಿನಗಳ ಕಾಲ ಕ್ಷೇತ್ರದ ಭೇಟಿಯನ್ನು ಮುಂದೂಡುವಂತೆ ಕೋರಿದ್ದಾರೆ.