ದಕ್ಷಿಣ ಕನ್ನಡದಲ್ಲಿ ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಕೋಡಿಂಬಾಳ ಗ್ರಾಮದ ಕುಕ್ಕರೆಬೆಟ್ಟು ನಿವಾಸಿ ಆನಂದ ನಾಯ್ಕ್ ಎಂಬುವರ ಪತ್ನಿ ವೀಣಾ (43) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.
ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವೀಣಾ ಅವರಿಗೆ ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಅವರ ದೇಹದಲ್ಲಿ ಬಿಳಿ ರಕ್ತಕಣ ಕಡಿಮೆಯಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ವೀಣಾ ಅವರು ಡೆಂಗ್ಯೂ ಜ್ವರದಿಂದಲೇ ಮೃತಪಟ್ಟಿದ್ದಾರೆಂಬುದು ಇನ್ನೂ ದೃಢಪಟ್ಟಿಲ್ಲ. ವೀಣಾ ಅವರ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದು, ಇನ್ನೂ ಅದರ ರಿಪೋರ್ಟ್ ಬಂದಿಲ್ಲ ಎಂದಿದ್ದಾರೆ.

ಮಂಗಳೂರಿನ ಗುಜ್ಜರ ಕೆರೆ ಪ್ರದೇಶದ ಗೋರಕ್ಷ ದಂಡು ಮತ್ತು ಅರೆಕೆರೆಬೈಲು ಭಾಗದ ಜ್ವರ ಪೀಡಿತ 43 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ 6 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಫಟ್ಟಿತ್ತು. ದಿನದಿಂದ ದಿನಕ್ಕೆ ಇಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.












Click it and Unblock the Notifications