ಧರ್ಮಸ್ಥಳದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಪರಿಶೀಲನಾ ಸಭೆ
ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಹಾನಿ ವೀಕ್ಷಣೆಗೆ ಸೋಮವಾರ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಂತರ ಧರ್ಮಸ್ಥಳಕ್ಕೆ ತೆರಳಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
ಮೊದಲು ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನೆರೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿದರು. ಸಂತ್ರಸ್ತರಿಗೆ ತಕ್ಷಣವೇ ಹತ್ತು ಸಾವಿರ ಬಿಡುಗಡೆಗೊಳಿಸುವುದಾಗಿ ತಿಳಿಸಿದರು. ಮನೆ ಕಟ್ಟಿಕೊಳ್ಳಲು ಐದು ಲಕ್ಷ ನೀಡುವ ಭರವಸೆಯನ್ನೂ ನೀಡಿದರು. ಬೆಳ್ತಂಗಡಿ ನಂತರ ನೇರವಾಗಿ ಧರ್ಮಸ್ಥಳಕ್ಕೆ ತೆರಳಿ ಅಲ್ಲಿ ಮಂಜುನಾಥನ ದರ್ಶನವನ್ನು ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದವನ್ನು ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳು ಹಾಗೂ ಪರಿಹಾರ ಕೇಂದ್ರದಲ್ಲಿ ಆಗುವ ಕಾರ್ಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಿದ್ದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜೊತೆಗಿದ್ದರು.












Click it and Unblock the Notifications